ಸುಳ್ವಾಡಿ ಪ್ರಕರಣ: ಮೃತಪಟ್ಟ ಕುಟುಂಬಕ್ಕೆ ಉಸ್ತುವಾರಿ ಸಚಿವರು, ಶಾಸಕರಿಂದ ಸಾಂತ್ವನ
ಹನೂರು, ಡಿ. 23: ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮನ ದೇವಾಲಯದ ಪ್ರಸಾದ ಸೇವನೆ ಪ್ರಕರಣದಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆ ಫಕಾರಿಯಾಗದೆ ಶುಕ್ರವಾರ ಮೃತಪಟ್ಟ ಸುಳ್ವಾಡಿ ಗ್ರಾಮದ ನಾಗೇಶ್ ಹಾಗೂ ಶನಿವಾರ ಮೃತಪಟ್ಟ ದೊರೆಸ್ವಾಮಿ ಮೇಡು ಗ್ರಾಮದ ರಂಗನ್ ಹಾಗೂ ಕುಟುಂಬವರ್ಗಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಆರ್. ನರೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಹಾಗೂ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಾಂತ್ವನ ಹೇಳಿದರು.
ಸುಳ್ವಾಡಿ ಗ್ರಾಮಕ್ಕೆ ತೆರಳಿ ನಾಗೇಶ್ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸಾಂತ್ವನ ಹೇಳಿ ವೈಯಕ್ತಿಕ ಪರಿಹಾರ ವಿತರಿಸಿದರು.
ಬಿದರಹಳ್ಳಿಯಲ್ಲಿ ರಂಗನ್ ಅವರ ಮೃತದೇಹ ಅಂತ್ಯಕ್ರಿಯೆ ನಡೆಸುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಶಾಸಕರು, ಜಿಲ್ಲಾಧಿಕಾರಿಯವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮೃತರ ಕುಟುಂಬದವರನ್ನು ಸಂತೈಸಿದ ಸಚಿವರು ಹಾಗೂ ಶಾಸಕರು ವೈಯಕ್ತಿಕ ಪರಿಹಾರವನ್ನು ನೀಡಿ ಸಮಾಧಾನಪಡಿಸಿ ಧೈರ್ಯ ತುಂಬಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಭರವಸೆ ನೀಡಿದರು.
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮನ ದೇವಾಲಯದ ಪ್ರಸಾದ ಸೇವನೆ ಪ್ರಕರಣ ಘೋರ ದುರಂತ. ಈಗಾಗಲೇ 17 ಮಂದಿ ಸಾವನಪ್ಪಿದ್ದಾರೆ. ಪ್ರಕರಣದಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 35 ಜನ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆÉ ಪಡೆಯುತ್ತಿದ್ದಾರೆ. ಜಿಲ್ಲಾಡಳಿತ ಪ್ರತಿಯೊಂದು ಆಸ್ಪತ್ರೆಗೂ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ದಾಖಲಾಗಿರುವವರ ಆರೋಗ್ಯ ಹಾಗೂ ಇನ್ನಿತರೆ ಎಲ್ಲಾ ಅಗತ್ಯ ನೆರವಿಗಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.
ಮೃತಪಟ್ಟ ಸರ್ಕಾರದಿಂದ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಸ್ಪತ್ರೆಯಲ್ಲಿ ದಾಖಲಾಗಿರುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರಿಗೂ ಅವಶ್ಯಕ ವೈದ್ಯಕೀಯ ಚಿಕಿತ್ಸೆ ನೀಡುವ ಕಾರ್ಯ ನಡೆಯುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಪ್ರಕರಣದಲ್ಲಿ ಮೃತಪಟ್ಟವರ ಹಾಗೂ ಅಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ದಿನನಿತ್ಯ ಬಳಕೆಯ ಪಡಿತರ ಪದಾರ್ಥಗಳನ್ನು ವಿತರಿಸಲಾಗುತ್ತಿದೆ. ಕೆಲವರು ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಬಹುದು. ಆದರೂ ನಿರಂತರವಾಗಿ ಅವರ ಕುಟುಂಬಕ್ಕೆ ನೀಡಬೇಕಿರುವ ಎಲ್ಲಾ ಸಹಾಯವನ್ನು ಒದಗಿಸಲಿದ್ದೇವೆ. ಮಾನವೀಯ ನೆಲೆಯಲ್ಲಿ ಸ್ಪಂದಿಸಲೆಬೇಕಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಪರಿಹಾರ ನೀಡುವುದಷ್ಟೆ ನಮ್ಮ ಕೆಲಸವಲ್ಲ. ಸಂತ್ರಸ್ತರ ಬದುಕಿಗೆ ಶಾಶ್ವತವಾಗಿ ನೆರವು ನೀಡಿ ಅವರು ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿದೆ. ಹೀಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆ ಮತ್ತು ವಿವಿಧ ಅಭಿವೃದ್ಧಿ ನಿಗಮಗಳಿಂದ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಲಸೌಲಭ್ಯ ಹಾಗೂ ಸ್ವಯಂ ಉದ್ಯೋಗಗಳನ್ನು ಕೈಗೊಳ್ಳಲು ನೆರವಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.
ಸಂತ್ರಸ್ತರ ಕುಟುಂಬದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದಾಗಿ ಜೆ.ಎಸ್.ಎಸ್ ಹಾಗೂ ಅಳ್ವಾಸ್ ಸಂಸ್ಥೆಗಳು ಮುಂದೆ ಬಂದಿವೆ. ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ಸಂಸ್ಥೆಗಳು ನೋಡಿಕೊಳ್ಳುವುದಾಗಿ ತಿಳಿಸಿದ್ದು, ಈಗಾಗಲೇ ನನ್ನನ್ನು ಸಂಪರ್ಕಿಸಿದ್ದಾರೆ ಎಂದು ನರೇಂದ್ರ ತಿಳಿಸಿದರು.
ಉಪವಿಭಾಗಾಧಿಕಾರಿ ಫೌಝಿಯಾ ತರನ್ನುಮ್ ಹಾಗೂ ಇತರರು ಇದೇ ಸಂದರ್ಭದಲ್ಲಿ ಇದ್ದರು. ಇದಾದ ಬಳಿಕ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಅಸ್ಪತ್ರೆಗೆ ತೆರಳಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಸಚಿವರು, ಶಾಸಕರು, ಜಿಲ್ಲಾಧಿಕಾರಿಯವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.