ಮಂಡ್ಯ: ಹುಂಡಿ ಕಳವು ಆರೋಪಿಗೆ 6 ವರ್ಷ ಜೈಲು
ಮಂಡ್ಯ, ಡಿ.25: ದೇವಸ್ಥಾನದ ಹುಂಡಿ ಕಳ್ಳತನ ಮಾಡಿದ್ದ ಆರೋಪಿಗೆ ಪಾಂಡವಪುರ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ರವಿಕಾಂತ್ ಅವರು 6 ವರ್ಷ ಜೈಲು ಶಿಕ್ಷೆ ಹಾಗೂ 4 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ನಿವಾಸಿ ಸೋಮ ಅಲಿಯಾಸ್ ಬೆಣ್ಣೆ ಸೋಮ ಎಂಬಾತ ಶಿಕ್ಷೆಗೊಳಗಾದ ಆರೋಪಿ. ಈತ ಪಾಂಡವಪುರ ತಾಲೂಕಿನ ಹರವು ಗ್ರಾಮದಲ್ಲಿರುವ ಪ್ರಾಚೀನ ಸ್ಮಾರಕ ಶ್ರೀ ರಾಮದೇವರ ದೇವಸ್ಥಾನದ ಹುಂಡಿ ಕಳವು ಮಾಡಿದ್ದ ಎನ್ನಲಾಗಿದೆ.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಪಾಂಡವಪುರ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ರವಿಕಾಂತ್ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಸಹಾಯಕ ಅಭಿಯೋಜಕ ಎಸ್.ಶಿವಕುಮಾರ್ ವಾದ ಮಂಡಿಸಿದರು.
Next Story