ಶಿವಕುಮಾರ ಸ್ವಾಮೀಜಿಯ ಆರೋಗ್ಯ ಸ್ಥಿರ: ಡಿಸಿಎಂ ಪರಮೇಶ್ವರ್
ತುಮಕೂರು,ಜ.17: ಡಾ.ಶ್ರೀಶಿವಕುಮಾರ ಸ್ವಾಮೀಜಿಯವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿನ ಆರೋಗ್ಯ ಪರಿಸ್ಥಿತಿಯೇ ಮುಂದುವರೆದಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಆರೋಗ್ಯ ಕುರಿತು ವೈದ್ಯರು ಮತ್ತು ಕಿರಿಯ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿ, ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯ ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ. ಆಸ್ಪತ್ರೆಯಿಂದ ಸ್ಥಳಾಂತರವಾದಾಗ ಇದ್ದ ಸ್ಥಿತಿಯೇ ಈಗಲೂ ಇದೆ. ಆರೋಗ್ಯದಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ ಎಂದರು.
ಶ್ರೀಗಳು ರಾತ್ರಿ ಕಣ್ಣು ಬಿಟ್ಟು ನೋಡಿದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ನಾನೂ ಕೂಡ ವೈದ್ಯರ ಜತೆ ಚರ್ಚಿಸಿದ್ದೇನೆ ಎಂದ ಅವರು, ಶ್ರೀಗಳು ಆದಷ್ಟು ಬೇಗ ಗುಣುಮುಖರಾಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಶ್ರೀಗಳ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಬಾರದು. ಅವರಿಗೆ ಸೋಂಕು ಜಾಸ್ತಿಯಾಗುತ್ತದೆ ಎಂಬುದನ್ನು ಭಕ್ತಾದಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಭಕ್ತರು ತಾವು ಇರುವ ಸ್ಥಳದಲ್ಲೇ ಶ್ರೀಗಳು ಆದಷ್ಟು ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.