ಸಚಿವ ಎಚ್.ಡಿ.ರೇವಣ್ಣ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ: ಬಸವರಾಜ ಹೊರಟ್ಟಿ
ಧಾರವಾಡ, ಫೆ. 2: ‘ಊರು ಸುಟ್ಟರೂ ಹನುಮಪ್ಪ ಹೊರಗೆ’ ಅನ್ನೋ ಹಾಗೇ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಗೆ ಜೆಡಿಎಸ್ ಸಿದ್ಧ ಎಂದಿದ್ದಾರೆ. ಅವರು ಎಲ್ಲದಕ್ಕೂ ಸಿದ್ಧವಿದ್ದಾರೆ. ಅವರಿಗೆ ಲೋಕೋಪಯೋಗಿ ಇಲಾಖೆ ಮತ್ತು ಹಾಸನದ ಅಭಿವೃದ್ಧಿಯಷ್ಟೇ ಸಾಕಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಏರ್ಪಟ್ಟಿದ್ದು, ಮುಂದಿನ ಲೋಕಸಭೆ ಚುನಾವಣೆ ಸೀಟು ಹಂಚಿಕೆ ಮತ್ತು ಮೈತ್ರಿ ಸಂಬಂಧ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಅದಕ್ಕೆ ನಾವೆಲ್ಲರೂ ಬದ್ಧರಾಗಿರಬೇಕಾಗುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಶಾಸಕರ ಹೊಗಳಿಕೆ ಸಲ್ಲ: ಕಾಂಗ್ರೆಸ್-ಜೆಡಿಎಸ್ ಪಕ್ಷದ ಮುಖಂಡರು ಮೈತ್ರಿ ಧರ್ಮವನ್ನು ಪಾಲಿಸಬೇಕು. ಆದರೆ, ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರನ್ನು ಹೊಗಳುವ ಮೂಲಕ ಸಿದ್ದರಾಮಯ್ಯನವರ ಹೆಸರಿಗೆ ಕಳಂಕ ತರುತ್ತಿದ್ದಾರೆ ಎಂದು ಹೊರಟ್ಟಿ ಟೀಕಿಸಿದರು.
ಕೇಂದ್ರದ ಬಜೆಟ್ ಒಂದು ಚುನಾವಣೆಯ ಗಿಮಿಕ್. ಈ ರೀತಿಯ ಜನಪ್ರಿಯ ಬಜೆಟ್ ಮಂಡನೆ ಮಾಡಲು ಐದು ವರ್ಷ ಏಕೆ ಬೇಕಿತ್ತು. ಉಚಿತವಾಗಿ ನೀಡುವ ದಂಧೆ ಎಲ್ಲಿಯವರೆಗೂ ನಿಲ್ಲುವುದಿಲ್ಲವೋ ಅಲ್ಲಿಯವರೆಗೂ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೊರಟ್ಟಿ ವಿಶ್ಲೇಷಿಸಿದರು.