ಕಾಂಗ್ರೆಸ್ನಲ್ಲಿ ದಲಿತರಿಗೆ ನಿರಂತರ ಅನ್ಯಾಯ: ಬಿ.ಎಸ್.ಯಡಿಯೂರಪ್ಪ
ಹುಬ್ಬಳ್ಳಿ, ಫೆ. 25: ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ನಿರಂತರವಾಗಿ ಅನ್ಯಾಯವಾಗುತ್ತಲೇ ಇದೆ. ಇದನ್ನು ಆ ಪಕ್ಷದ ನಾಯಕರೇ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದಲಿತರಿಗೆ ಅನ್ಯಾಯವಾಗಿದೆ ಎಂಬುದನ್ನು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ಪ್ರತಿ ಬಾರಿಯೂ ಅನ್ಯಾಯವಾಗುತ್ತಲೇ ಇದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ಅನ್ಯಾಯವಾಗುತ್ತಿದೆ ಎಂಬುದು ಹಳೆಯ ವಿಚಾರ. ನಿನ್ನೆ ದಾವಣಗೆರೆಯಲ್ಲಿ ಡಿಸಿಎಂ ಪರಮೇಶ್ವರ್ 'ಕಾಂಗ್ರೆಸ್ನಲ್ಲಿ ದಲಿತರಿಗೆ ಅನ್ಯಾಯವಾಗಿದೆ. ಬಸವಲಿಂಗಪ್ಪ, ಕೆ.ಎಚ್.ರಂಗನಾಥ್, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಹೋಯಿತು. ನನಗೂ ಮೂರು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿತು. ಇದೀಗ ಬೇಕೋ ಬೇಡವೋ ಎನ್ನುವಂತೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ಮೊದಲಿನಿಂದಲೂ ಅನ್ಯಾಯವಾಗುತ್ತಲೇ ಇದೆ ಎಂದು ಯಡಿಯೂರಪ್ಪ ದೂರಿದರು.