ಹಲ್ಲೆ, ಕೊಲೆ ಬೆದರಿಕೆ ಪ್ರಕರಣ: ಐವರಿಗೆ ಎರಡು ವರ್ಷ ಜೈಲು ಶಿಕ್ಷೆ
ಶಿವಮೊಗ್ಗ, ಫೆ. 25: ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಐವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ ಹಿರೇಮಠರವರು ತೀರ್ಪು ನೀಡಿದ್ದಾರೆ.
ಚಂದ್ರನಾಯ್ಕ್, ಸಪ್ಪನ್, ಸಚಿನ್, ರಮೇಶ್ ಹಾಗೂ ಬಸವರಾಜನಾಯ್ಕ್ ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರ ಉದ್ಯೋಗಿಯಾಗಿರುವ ಸಂದೇಶನಾಯ್ಕ್ ಎಂಬುವರ ಮೇಲೆ, ಮಲವಗೊಪ್ಪದಲ್ಲಿರುವ ಅವರ ಮನೆಯಲ್ಲಿಯೇ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದ ಆರೋಪ ಇವರ ಮೇಲಿತ್ತು.
ಈ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆಯ ಜೊತೆಗೆ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
Next Story