ಶಿವಮೊಗ್ಗ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಪ್ರಚಾರ ನಡೆಸುವುದು ಖಚಿತ: ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ
ಶಿವಮೊಗ್ಗ, ಮಾ. 17: ಪ್ರಸ್ತುತ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ. ಹಾಗೆಯೇ ಸಚಿವ ಡಿ.ಕೆ.ಶಿವಕುಮಾರ್ ರವರು ತಮ್ಮ ಪರವಾಗಿ ಪ್ರಚಾರ ನಡೆಸುವುದು ಖಚಿತವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರವಿವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಸಚಿವ ಡಿ.ಕೆ.ಶಿವಕುಮಾರ್ ರಿಗೆ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ವಹಿಸಲಾಗಿದೆ. ಇದರಿಂದ ಮೈತ್ರಿಕೂಟಕ್ಕೆ ಮತ್ತಷ್ಟು ಶಕ್ತಿ ತರಲಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಡಿಯೂರಪ್ಪ ಮತ್ತು ಶಿವಕುಮಾರ್ ನಡುವಿನ ಸ್ನೇಹದ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗದ ಹೊಣೆ ಹೊತ್ತಿಕೊಳ್ಳುವ ಸಾಧ್ಯತೆ ಕಡಿಮೆಯಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಅವರೊಂದಿಗೆ ಖುದ್ದಾಗಿ ಮಾತುಕತೆ ನಡೆಸಿದ್ದೆನೆ. ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು, ಗೆಲುವಿಗೆ ಶ್ರಮಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಗೆಳೆತನ ಬೇರೆ. ರಾಜಕೀಯವೇ ಬೇರೆ. ಮುಂದೊಂದು ದಿನ ತಾವು ಬಿ.ಎಸ್.ವೈ. ಮನೆಗೆ ಹೋಗಬಹುದು. ಇಲ್ಲ ಅವರ ಕುಟುಂಬದವರು ನಮ್ಮ ಮನೆಗೆ ಬರಬಹುದು' ಎಂದು ಬಿಎಸ್ವೈ-ಡಿ.ಕೆ.ಶಿ. ಸ್ನೇಹದ ಬಗ್ಗೆ ವಿಶ್ಲೇಷಿಸಿದರು.
ಕಳೆದ ಕೆಲ ತಿಂಗಳ ಹಿಂದೆ ನಡೆದ ಉಪ ಚುನಾವಣೆ ವೇಳೆ ಶಿವಕುಮಾರ್ ರವರಿಗೆ ಬಳ್ಳಾರಿ ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಕಾರಣದಿಂದ, ಅವರು ಶಿವಮೊಗ್ಗ ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರಕ್ಕೆ ಆಗಮಿಸಲು ಸಾಧ್ಯವಾಗಲಿಲ್ಲ. ಈ ಬಾರಿ ಕ್ಷೇತ್ರಕ್ಕೆ ಆಗಮಿಸುವುದು ಖಚಿತವಾಗಿದ್ದು, ನಮಗೂ ಅವರ ಅನಿವಾರ್ಯವಿದೆ ಎಂದರು.