ತುಮಕೂರು: ಬಿಜೆಪಿ ಅಭ್ಯರ್ಥಿ ಬಸವರಾಜು ನಾಮಪತ್ರ ಸಲ್ಲಿಕೆ
ಒಗ್ಗಟ್ಟು ಪ್ರದರ್ಶಿಸಿದ ಮುಖಂಡರು
ತುಮಕೂರು,ಮಾ.26: ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಂಸದ ಜಿ.ಎಸ್.ಬಸವರಾಜು ಮಂಗಳವಾರ ಬೆಂಬಲಿಗರೊಂದಿಗೆ ರ್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ನಗರದ ಶ್ರೀ ಸಿದ್ದಿವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಜಿ ಸಚಿವರಾದ ವಿ.ಸೋಮಣ್ಣ, ಸೊಗಡು ಶಿವಣ್ಣ, ಶಾಸಕರಾದ ಜೆ.ಸಿ.ಮಾಧುಸ್ವಾಮಿ, ಜಿ.ಬಿ.ಜ್ಯೋತಿಗಣೇಶ್, ಬಿ.ಸಿ.ನಾಗೇಶ್, ಮಾಜಿ ಶಾಸಕ ಬಿ.ಸುರೇಶ್ಗೌಡ ಸೇರಿದಂತೆ ಅಪಾರ ಕಾರ್ಯಕರ್ತರೊಂದಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಬಲ ಪ್ರದರ್ಶಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಬಂಡಾಯ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ತಮ್ಮ ಬಲ ಪ್ರದರ್ಶನಕ್ಕೆ ಸೆಡ್ಡು ಹೊಡೆಯುವ ರೀತಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಟೌನ್ಹಾಲ್, ಎಂ.ಜಿ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಈಗಾಗಲೇ ಮೂರು ಬಾರಿ ನಾಮಪತ್ರ ಸಲ್ಲಿಸಿರುವ ಜಿ.ಎಸ್.ಬಸವರಾಜು ಮಂಗಳವಾರ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಶಕ್ತಿ ಪ್ರದರ್ಶನ ಪ್ರದರ್ಶನ ಮಾಡುವುದರ ಜೊತೆಗೆ ಬಿಜೆಪಿಯಲ್ಲಿದ್ದ ಬಿಕ್ಕಟ್ಟು ಶಮನವಾಗಿದೆ ಎನ್ನುವ ರೀತಿಯಲ್ಲಿ ಎಲ್ಲ ನಾಯಕರು ಒಟ್ಟಾಗಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ.