ಕಾಂಗ್ರೆಸ್-ಜೆಡಿಎಸ್ ಪಕ್ಷದ ಸಭೆಗೆ ಮತ್ತೊಮ್ಮೆ ಗೈರಾದ ಸಚಿವ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್
ಮೈಸೂರು,ಮಾ.29: ಕಾಂಗ್ರೆಸ್-ಜೆಡಿಎಸ್ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರ ಸಭೆಗೆ ಮತ್ತೊಮ್ಮೆ ಗೈರಾಗುವ ಮೂಲಕ ತಮ್ಮ ಅಸಮಧಾನವನ್ನು ಸಚಿವ ಜಿ.ಟಿ.ದೇವೇಗೌಡ ಹೊರಹಾಕಿದ್ದಾರೆ ಎನ್ನಲಾಗಿದೆ.
ನಗರದ ಕಲ್ಯಾಣಮಂಟದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉಭಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ಸಭೆಗೆ ಸಚಿವರಾದ ಸಾ.ರಾ.ಮಹೇಶ್ ಮತ್ತು ಜಿ.ಟಿ.ದೇವೇಗೌಡ ಗೈರಾಗುವ ಮೂಲಕ ತಮ್ಮಲ್ಲಿ ಹೊಂದಾಣಿಕೆ ಇಲ್ಲ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನೆ ಮಾಡಿದ್ದಾರೆ. ಕಳೆದ ವಾರ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಕರೆದಿದ್ದ ಪತ್ರಿಕಾಗೋಷ್ಠಿಗೂ ಇಬ್ಬರು ಸಚಿವರು ಗೈರಾಗಿದ್ದರು.
ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವ ಜಿ.ಟಿ.ದೇವೇಗೌಡ ಅವರ ಕುಟುಂಬದಲ್ಲಿ ಕಾರ್ಯಕ್ರಮವಿರುವುದರಿಂದ ಬರಲು ಸಾಧ್ಯವಾಗಿಲ್ಲ, ಸಾ.ರಾ.ಮಹೇಶ್ ಕೆ.ಆರ್.ನಗರದಲ್ಲಿ ನಿಖಿಲ್ ಜೊತೆ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೆ ನಗರ ಜೆಡಿಎಸ್ ಅಧ್ಯಕ್ಷ ಚಲುವೇಗೌಡ ಅವರು ಅನಾರೋಗ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ಬರಲು ಸಾಧ್ಯವಾಗಲಿಲ್ಲ ಎಂದು ಸಮರ್ಥಿಸಿಕೊಂಡರು.