ಕೊಡಗಿನಲ್ಲಿ ಗುಡುಗು, ಸಿಡಿಲಿನ ಅಬ್ಬರ: ಮರದ ಕೊಂಬೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ
ಮಡಿಕೇರಿ,ಎ.8 :ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು. ಸೋಮವಾರಪೇಟೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮತ್ತೆ ಆಲಿಕಲ್ಲು ಮಳೆಸುರಿದಿದ್ದು, ರೈತರು ಆತಂಕಕ್ಕೊಳಗಾಗಿದ್ದಾರೆ.
ಚೆಟ್ಟಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಗಾಳಿಮಳೆಗೆ ಮರದ ಕೊಂಬೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಿರಾಜಪೇಟೆ ಪಟ್ಟಣದಲ್ಲಿ ಹನಿಮಳೆಯಾಗಿದ್ದು, ಕಾಕೋಟುಪರಂಬು, ಹೆಗ್ಗಳ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲಿನ ಅಬ್ಬರ ಜೋರಾಗಿದ್ದು, ನಿರೀಕ್ಷೆಯಷ್ಟು ಮಳೆಯಾಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಅಭಿಪ್ರಾಯವಾಗಿದೆ.