ಮಂಡ್ಯ, ಹಾಸನ, ತುಮಕೂರಿನಲ್ಲಿ ಜೆಡಿಎಸ್ ಗೆಲುವು ಖಚಿತ: ಸಚಿವ ರೇವಣ್ಣ
ಶಿವಮೊಗ್ಗ, ಎ.20: ಮಂಡ್ಯ, ಹಾಸನ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲುವು ಖಚಿತ ಎಂದು ಸಚಿವ ಎಚ್.ಡಿ. ರೇವಣ್ಣ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೊಳ್ಳು ಆಶ್ವಾಸನೆಗಳನ್ನು ನೀಡಿ ದೇಶದ ಜನರಿಗೆ ಅನ್ಯಾಯ ಮಾಡಿರುವ, ಸುಳ್ಳಿನ ಸರದಾರ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದಿಲ್ಲ. ಈ ಬಾರಿ ದೇಶವಾಸಿಗಳು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ರಾಷ್ಟ್ರಕ್ಕೆ ಬಿಜೆಪಿ ಪಕ್ಷದ ಕೊಡುಗೆ ಏನೂ ಇಲ್ಲ. ಕಳೆದ ಐದು ವರ್ಷಗಳ ಆಡಳಿತವಾದಿಯಲ್ಲಿ ಬಿಜೆಪಿಯ ಸಾಧನೆ ಶೂನ್ಯ. ಈ ಕಾರಣದಿಂದಲೇ ಪ್ರಚಾರಕ್ಕೆ ಅವರ ಬಳಿ ಯಾವ ವಿಷಯವೂ ಇಲ್ಲ. ಮೋದಿಯನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆ ಪೂರ್ಣಗೊಂಡ ನಂತರ ಪ್ರಸ್ತುತ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಷಿಯವರಿಗೆ ಬಂದಿರುವ ಸ್ಥಿತಿಯೇ ಬಿ.ಎಸ್.ಯಡಿಯೂರಪ್ಪಗೂ ಬರಲಿದೆ ಎಂದು ಇದೇ ಸಂದರ್ಭ ತಿಳಿಸಿದರು.
ಗೋಷ್ಠಿಯಲ್ಲಿ ಶಾಸಕರಾದ ಬಾಲಕೃಷ್ಣ, ಕೆ.ಟಿ. ಶ್ರೀಕಂಠೇಗೌಡ, ಎಸ್.ಎಸ್. ಭೋಜೇಗೌ ಸೇರಿದಂತೆ ಮೊದಲಾದವರಿದ್ದರು.