ಬರ: ಕುಡಿಯುವ ನೀರು-ಮೇವು ಪೂರೈಕೆಗೆ 162 ಕೋಟಿ ರೂ.ಬಿಡುಗಡೆ
ಬೆಂಗಳೂರು, ಎ. 23: ರಾಜ್ಯದ ಬರ ಪೀಡಿತ 162 ತಾಲೂಕುಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ಪ್ರತಿ ತಾಲೂಕಿಗೆ ತಲಾ 1 ಕೋಟಿ ರೂ.ನಂತೆ ಒಟ್ಟು 162 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ಮೂವತ್ತು ಜಿಲ್ಲೆಗಳಿಗೂ ಹಣ ಬಿಡುಗಡೆ ಮಾಡಿದ್ದು, ಬೆಳಗಾವಿ, ತುಮಕೂರು ಜಿಲ್ಲೆಗಳಿಗೆ ತಲಾ 10 ಕೋಟಿ ರೂ. ಅತ್ಯಂತ ಹೆಚ್ಚು, ದಕ್ಷಿಣ ಕನ್ನಡ ಜಿಲ್ಲೆಗೆ 5 ಕೋಟಿ ರೂ., ಮೈಸೂರು ಜಿಲ್ಲೆಗೆ 2 ಕೋಟಿ ರೂ. ಹಾಗೂ ಕೊಡಗು ಮತ್ತು ಉಡುಪಿ ಜಿಲ್ಲೆಗೆ ತಲಾ 3 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಬಿಡುಗಡೆ ಮಾಡಿರುವ ಅನುದಾನವನ್ನು ಕೇಂದ್ರದ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಪೂರೈಕೆಗೆ ಬಳಕೆ ಮಾಡಬೇಕು. ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಹಣವನ್ನು ಬಳಕೆ ಮಾಡಬೇಕು.
ವೆಚ್ಚ ಮಾಡಿದ ಹಣಕ್ಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು. ಹಣ ಬಳಕೆಯಲ್ಲಿ ಯಾವುದೇ ಲೋಪವಾದಲ್ಲಿ ಆಯಾ ಜಿಲ್ಲಾಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕಂದಾಯ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಎಚ್ಚರಿಸಲಾಗಿದೆ