ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದರೆ ಗಂಭೀರವಾಗಿ ಪರಿಗಣನೆ: ಡಾ.ಜಿ.ಪರಮೇಶ್ವರ್
ಬೆಂಗಳೂರು, ಮೇ 1: ಸಚಿವ ಜಿ.ಟಿ.ದೇವೇಗೌಡ ಹೇಳಿದಂತೆ ಮೈಸೂರು ಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿರುವುದು ನಿಜವೇ ಆಗಿದ್ದರೆ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಿ.ಟಿ.ದೇವೇಗೌಡ ಯಾವ ಹಿನ್ನೆಲೆಯಲ್ಲಿ ಈ ರೀತಿ ಹೇಳಿದ್ದಾರೆಯೋ ಗೊತ್ತಿಲ್ಲ. ಈ ಸಂಬಂಧ ಮೈತ್ರಿ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಮಂಡ್ಯದ ಕೆಲ ಕಾಂಗ್ರೆಸ್ ನಾಯಕರು ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲಿಲ್ಲ. ಆದರೂ ಚುನಾವಣೆಯ ನಂತರ ಹೋಟೆಲ್ ನಲ್ಲಿ ಯಾಕೆ ಪಾರ್ಟಿ ಮಾಡಿರುವುದು ಅರ್ಥವಾಗುತ್ತಿಲ್ಲವೆಂದು ಅವರು ತಿಳಿಸಿದರು.
ಪಕ್ಷದ ನಿಯಮವನ್ನು ಉಲ್ಲಂಘಿಸಿದವರ ಮೇಲೆ ಪರಿಶೀಲನೆ ಹಾಗೂ ಕ್ರಮ ಕೈಗೊಳ್ಳುವುದಕ್ಕೆ ಶಿಸ್ತು ಸಮಿತಿ ಇದೆ. ಎಲ್ಲವನ್ನು ಪರಿಶೀಲಿಸಿ ಕೆಪಿಸಿಸಿ ಅಧ್ಯಕ್ಷರು ಕ್ರಮ ಕೈಗೊಳ್ಳುತ್ತಾರೆಂದು ಅವರು ಹೇಳಿದರು.
ನಾನು ಹಾಗೂ ಡಿ.ಕೆ.ಶಿವಕುಮಾರ್ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಉಸ್ತುವಾರಿ ವಹಿಸಿಕೊಂಡಿದ್ದೇವೆ. ಚುನಾವಣಾ ರಣ ತಂತ್ರದ ಬಗ್ಗೆ ಪಕ್ಷದ ಅಧ್ಯಕ್ಷರೊಂದಿಗೆ ಚರ್ಚಿಸಿದ್ದೇವೆಂದು ಅವರು ಹೇಳಿದರು.