ಜೂನ್ ಎರಡನೆ ವಾರದಲ್ಲಿ ಬಿಎಸ್ವೈ ಮುಖ್ಯಮಂತ್ರಿ: ಮಾಜಿ ಸಚಿವ ವಿ.ಸೋಮಣ್ಣ ಭವಿಷ್ಯ
ಕಲಬುರಗಿ, ಮೇ 5: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಮೇ 30ರೊಳಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ಭವಿಷ್ಯ ನುಡಿದಿದ್ದಾರೆ.
ರವಿವಾರ ಜಿಲ್ಲೆಯ ಚಿಂಚೋಳಿ ಕ್ಷೇತ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಚಿಂಚೋಳಿ ಮತ್ತು ಕುಂದುಗೋಳ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಬಿಜೆಪಿ ಸ್ಥಾನಗಳು 106ಕ್ಕೆ ಹೆಚ್ಚಳವಾಗಲಿದ್ದು, ಜೂನ್ ಎರಡನೆ ವಾರದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗಳಿಸಿದ್ದರೂ ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿವೆ. ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಆವರಿಸಿದ್ದರೂ ವಿಧಾನಸೌಧಕ್ಕೆ ಮುಖ್ಯಮಂತ್ರಿ ಬರುತ್ತಿಲ್ಲ ಎಂದು ಸೋಮಣ್ಣ ಟೀಕಿಸಿದರು.
ನಾನು ಏಳು ಬಾರಿ ಶಾಸಕನಾಗಿದ್ದೇನೆ, ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇಂತಹ ಮುಖ್ಯಮಂತ್ರಿ ನೋಡಿಲ್ಲ. ಆರೋಗ್ಯಕ್ಕಾಗಿ ರೆಸಾರ್ಟ್ಗೆ ಹೋಗುವುದು, ಹವನ-ಹೋಮಗಳನ್ನು ಯಾರೂ ಮಾಡಿರಲಿಲ್ಲ. ಸಾರ್ವಜನಿಕರ ತೆರಿಗೆ ಹಣವನ್ನು ಸಿಎಂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸೋಮಣ್ಣ ಆರೋಪಿಸಿದರು.