ದಾವಣಗೆರೆ: ಪ್ರಜ್ಞಾಸಿಂಗ್ ಹೇಳಿಕೆ, ಈಶ್ವರ್ ಚಂದ್ರ ಪ್ರತಿಮೆ ಧ್ವಂಸ ಖಂಡಿಸಿ ಸಿಪಿಐ ಪ್ರತಿಭಟನೆ
ದಾವಣಗೆರೆ, ಮೇ 18: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯನ್ನು ದೇಶ ಭಕ್ತ ಎಂಬ ಬಿಜೆಪಿ ನಾಯಕಿ ಪ್ರಜ್ಞಾಸಿಂಗ್ ಠಾಕೂರ್ ಹೇಳಿಕೆ ಖಂಡಿಸಿ ಹಾಗೂ ಕೊಲ್ಕತ್ತಾದಲ್ಲಿ ಈಶ್ವರ್ ಚಂದ್ರ ವಿದ್ಯಾಸಾಗರ ಅವರ ಪ್ರತಿಮೆ ಉರುಳಿಸಿದ್ದನ್ನು ವಿರೋಧಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಿಪಿಐ ಜಿಲ್ಲಾ ಮಂಡಳಿ ನಗರದ ಪ್ರತಿಭಟನೆ ನಡೆಸಿತು.
ಗಾಂಧಿ ವೃತ್ತದಲ್ಲಿ ಜಮಾಯಿಸಿದ ಸಿಪಿಐ ಕಾರ್ಯಕರ್ತರು ಬಿಜೆಪಿ ನಾಯಕರ ವರ್ತನೆಯನ್ನು ಖಂಡಿಸಿದರು, ನಂತರ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಗೋಡ್ಸೆಯನ್ನು ದೇಶ ಭಕ್ತ ಎಂದು ದೇಶ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ನಾಯಕಿ ಪ್ರಜ್ಞಾಸಿಂಗ್ ಠಾಕೂರ್ ಹಾಗೂ ಈಶ್ವರ್ ಚಂದ್ರ ವಿದ್ಯಾಸಾಗರ ಅವರ ಪ್ರತಿಮೆ ಉರುಳಿಸಿ ದೇಶ ವಿರೋಧಿ ಚಟುವಟಿಕೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಹೆಚ್.ಕೆ.ರಾಮಚಂದ್ರಪ್ಪ, ಅವರಗೆರೆ ಚಂದ್ರು, ಹೆಚ್.ಜಿ.ಉಮೇಶ್, ಆನಂದರಾಜ್, ಬಸವರಾಜ್, ರಾಮಪ್ಪ, ರಮೇಶ್ ಸೇರಿದಂತೆ ಇತರರು ಇದ್ದರು.