ರಾಜ್ಯದಲ್ಲಿ 14,816 ಜಾನುವಾರುಗಳಿಗೆ ಗೋ ಶಾಲೆಯಲ್ಲಿ ವ್ಯವಸ್ಥೆ: ಹೈಕೋರ್ಟ್ಗೆ ವರದಿ ಸಲ್ಲಿಕೆ
ಬೆಂಗಳೂರು, ಮೇ 21: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಹಿನ್ನೆಲೆಯಲ್ಲಿ ಗೋ ಶಾಲೆ ಪ್ರಾರಂಭಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಗೋ ಶಾಲೆಗಳನ್ನು ಸ್ಥಾಪಿಸಿ 14,816 ಜಾನುವಾರುಗಳಿಗೆ ಮೇವು, ನೀರು ಸೇರಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ವರದಿ ಸಲ್ಲಿಸಿದೆ.
ಈ ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರಿನ ಎ.ಮಲ್ಲಿಕಾರ್ಜುನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಸ್.ಸುಜಾತ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಬೆಂಗಳೂರು ನಗರ ಸೇರಿ ರಾಜ್ಯದ 30 ಜಿಲ್ಲೆಗಳಲ್ಲಿ 1,29,08,292 ಜಾನುವಾರು, ಎಮ್ಮೆ, ಕುರಿಗಳಿದ್ದು, 62,16,466 ಟನ್ ಮೇವು ಸಂಗ್ರಹವಿದೆ. ಅದರಲ್ಲಿ 14,816 ಜಾನುವಾರುಗಳಿಗೆ 21 ಗೋ ಶಾಲೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೂ 30603 ಟನ್ ಮೇವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಗೋ ಶಾಲೆಗಳನ್ನು ಪ್ರಾರಂಭಿಸಿರುವ ಬಗ್ಗೆ ಬರಗಾಲ ಪೀಡಿತ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗಿದೆ. ಆ ಗೋ ಶಾಲೆಗಳಲ್ಲಿ ಜಾನುವಾರುಗಳಿಗೆ ರೋಗ ಬರದಂತೆ ತಡೆಗಟ್ಟಲು ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ವರದಿಯ ವಿವರವನ್ನು ದಾಖಲಿಸಿಕೊಂಡ ನ್ಯಾಯಪೀಠವು ಅರ್ಜಿ ವಿಚಾರಣೆುನ್ನು ಮೇ 29ಕ್ಕೆ ಮುಂದೂಡಿತು.