ಹಾಸನ: ಗೆದ್ದ ಮರುದಿನವೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಪ್ರಜ್ವಲ್ ರೇವಣ್ಣ!
ಹಾಸನ, ಮೇ 24: ಹಾಸನದಲ್ಲಿ ಸುಮಾರು ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ತನ್ನ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ನಿಂದ ಏಕೈಕ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ಇಂದು ಬೆಳಗ್ಗೆ ಹಾಸನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ತನ್ನ ಕ್ಷೇತ್ರವಾಗಿದ್ದ ಹಾಸನವನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮೊಮ್ಮಗ ಪ್ರಜ್ವಲ್ ಅವರಿಗೆ ಬಿಟ್ಟು ಕೊಟ್ಟು ತಾವು ತುಮಕೂರಿನಲ್ಲಿ ಸ್ಪರ್ಧಿಸಿದ್ದರು. ಆದರೆ ಅಲ್ಲಿ ದೇವೇಗೌಡರು ಅಲ್ಲಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ತನ್ನ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ದೇವೇಗೌಡರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸುತ್ತೇನೆ. ತಂದೆ ರೇವಣ್ಣರ ಜೊತೆಗೂ ಈ ಬಗ್ಗೆ ಚರ್ಚಿಸುತ್ತೇನೆ. ಹಾಸನದಲ್ಲಿ ತಾನು ರಾಜೀನಾಮೆ ನೀಡುತ್ತೇನೆ. ಇದನ್ನು ದೇವೇಗೌಡರು ಪ್ರೀತಿಯಿಂದ ಸ್ವೀಕರಿಸಬೇಕು. ಇಲ್ಲಿ ಮತ್ತೆ ಅವರು ಸ್ಪರ್ಧಿಸಿ ಜಯಿಸಬೇಕು. ಬಳಿಕ ವಿಜಯೋತ್ಸವ ಮಾಡುತ್ತೇವೆ ಎಂದು ಪ್ರಜ್ವಲ್ ಹೇಳಿದ್ದಾರೆ.