ರಮೇಶ್ ಜಾರಕಿಹೊಳಿಯ ಮುಂದಿನ ನಡೆ ಬಗ್ಗೆ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ದಾವಣಗೆರೆ: ಸದ್ಯ ಶಾಸಕ ರಮೇಶ್ ಜಾರಕಿಹೊಳಿ ತಟಸ್ಥವಾಗಿದ್ದು, ಅವರ ಮುಂದಿನ ನಡೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಹೊಯ್ದಾಟಗಳ ಮಧ್ಯೆಯೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ನಡೆಯಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಾಕಿ ಉಳಿದ 4 ವರ್ಷ ಅವಧಿಯನ್ನೂ ಪೂರೈಸುತ್ತಾರೆ. ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಸರ್ಕಾರಕ್ಕೆ ಯಾವುದೇ ಅಪಾಯವೂ ಇಲ್ಲ. ಯಾರಿಗೆ ಸಚಿವ ಸ್ಥಾನ ಎಂಬುದು ಜೂ.10ರಂದು ಪಕ್ಕಾ ಆಗಲಿದೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ನಂತರ ಉಂಟಾಗುವ ಭಿನ್ನಮತವನ್ನು ಕಾಂಗ್ರೆಸ್ ಹೈಕಮಾಂಡ್ ನಿಭಾಯಿಸಲಿದೆ. ಸರ್ಕಾರವೆಂದ ಮೇಲೆ ಏಳುಬೀಳುಗಳು ಸಹಜ. ಏನೇ ಆದರೂ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ. ಸಮ್ಮಿಶ್ರ ಸರ್ಕಾರವು ಬಾಕಿ 4 ವರ್ಷ ಅವದಿ ಪೂರ್ಣಗೊಳಿಸುತ್ತದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು.
Next Story