ಚೀಟಿ ಹಣ ವಾಪಸ್ ನೀಡದ್ದಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿಸಿದರು !
ರಾಮನಗರ, ಜೂ.14: ಚೀಟಿ ಹಣ ವಾಪಸ್ ನೀಡಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊರ ವಲಯದ ತಾವರೆಕೆರೆ ವ್ಯಾಪ್ತಿಯ ಕೊಡಿಗೆಹಳ್ಳಿಯಲ್ಲಿ ಗುರುವಾರ ನಡೆದಿದೆ.
ತಮ್ಮ ಮಗಳೊಂದಿಗೆ ಕೊಡಿಗೆಹಳ್ಳಿಯಲ್ಲಿ ವಾಸವಾಗಿದ್ದ ಕೊಳ್ಳೆಗಾಲ ಮೂಲದ ರಾಜಮಣಿ ಎಂಬವರು ಚೀಟಿ ವ್ಯವಹಾರ ನಡೆಸುತ್ತಿದ್ದು, ಚೀಟಿ ಹಣ ವಾಪಸ್ ನೀಡದೇ ಊರು ತೊರೆದಿದ್ದರು. ರಾಜಮಣಿ ಹಲವರಿಗೆ ಹಣ ಕೊಡಲು ಬಾಕಿ ಇತ್ತು ಎನ್ನಲಾಗಿದ್ದು, ಹೀಗಾಗಿ ಗುರುವಾರ ಬೆಳಗ್ಗೆ ಗ್ರಾಮಕ್ಕೆ ಬಂದಿದ್ದ ರಾಜಮಣಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಡಿಯೋ ವೈರಲ್ ಆದ ಬಳಿಕ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಅಲ್ಲದೇ, ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು, ಮಹಿಳೆ ದೂರು ನೀಡಿದರೆ, ಪ್ರಕರಣ ದಾಖಲಿಸಿಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.