'ಐಎಂಎ ಮುಖ್ಯಸ್ಥ ಮನ್ಸೂರ್ ಜೊತೆ ಫೋಟೋ' ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಹೊಸದಿಲ್ಲಿ, ಜೂ. 17: ಐ ಮಾನಿಟರಿ ಅಡ್ವೈಸರಿ(ಐಎಂಎ) ಕಂಪೆನಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಯಾರೂ ಎಂದು ನನಗೆ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವೊಂದಕ್ಕೆ ರೋಷನ್ ಬೇಗ್ ಆತನನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮನ್ಸೂರ್ ಜತೆ ಫೋಟೋ ತೆಗೆಸಿಕೊಂಡಿದ್ದ. ಈ ಪ್ರಕರಣ ಸಿಟ್ ತನಿಖೆ ಪ್ರಗತಿಯಲ್ಲಿದ್ದು, ಸತ್ಯಾಂಶ ಬೆಳಕಿಗೆ ಬರಬೇಕಿದೆ ಎಂದು ತಿಳಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ಸುದ್ದಿ ಕೇವಲ ಊಹಾಪೋಹ ಅಷ್ಟೇ ಎಂದ ಅವರು, ವೈಯಕ್ತಿಕ ಕೆಲಸದ ನಿಮಿತ್ತ ಹೊಸದಿಲ್ಲಿಗೆ ಆಗಮಿಸಿದ್ದು, ನಾಳೆ ಸಾಧ್ಯವಾದರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದೇನೆ ಎಂದು ತಿಳಿಸಿದರು.
ಪ್ರತಿಕ್ರಿಯಿಸಲಾರೆ: ಬಳ್ಳಾರಿಯ ಜಿಂದಾಲ್ ಕಂಪೆನಿಗೆ ಭೂಮಿ ಮಾರಾಟ ವಿಚಾರ ಸಂಬಂಧ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸರಕಾರದ ಭಾಗವಾಗಿರುವ ನಾನೇ ಈ ವಿಚಾರವಾದ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡುವಂತೆ ಸಲಹೆ ಮಾಡಿದ್ದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.