ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎ.ಮಂಜು
ಎ.ಮಂಜು- ಪ್ರಜ್ವಲ್ ರೇವಣ್ಣ
ಬೆಂಗಳೂರು, ಜೂ.26: ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಕೋರಿ ಹಾಸನದ ಪರಾಜಿತ ಅಭ್ಯರ್ಥಿ ಎ.ಮಂಜು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. ಹಲವು ಕಂಪೆನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಅದನ್ನು ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ.
ಅಲ್ಲದೆ, ಸರಕಾರಿ ಆಸ್ತಿಯನ್ನು ಅವರ ಹೆಸರಿಗೆ ರಿಜಿಸ್ಟರ್ ಮಾಡಿಸಿರುವುದು ಸಹ ಕಂಡುಬಂದಿದೆ. 1.88 ಕೋಟಿ ರೂ ಹಣವನ್ನು ಸರಕಾರ ಅವರ ಖಾತೆಗೆ ವರ್ಗಾವಣೆ ಮಾಡಿದೆ. ಇದ್ಯಾವುದೂ ಚುನಾವಣಾ ಅಫಿಡವಿಟ್ನಲ್ಲಿ ಸಮೂದಾಗಿಲ್ಲ. ತನಗೆ ಆದಾಯವೇ ಇಲ್ಲ, ಸಂಪಾದನೆಯೇ ಇಲ್ಲ ಎಂದು ಹೇಳಿಕೊಂಡಿದ್ದ ಪ್ರಜ್ವಲ್ ಅವರಿಗೆ ಇಷ್ಟು ಹಣ ಎಲ್ಲಿಂದ ಬಂತು. ಏಕೆ ಮತ್ತು ಹೇಗೆ ಬಂತು? ಈ ಕುರಿತು ನಾವು ಅವರ ಆದಾಯದ ಮೂಲವನ್ನು ತೆಗೆಯುತ್ತೇವೆ ಎಂದು ಅರ್ಜಿಯಲ್ಲಿ ಬರೆಯಲಾಗಿದೆ.
ಅಲ್ಲದೆ ತಪ್ಪು ಮಾಹಿತಿ ನೀಡಿ ಜನರನ್ನು ಹಾಗೂ ಚುನಾವಣಾ ಆಯೋಗವನ್ನು ದಾರಿ ತಪ್ಪಿಸಿದ ಕಾರಣ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಕೂಡಲೇ ಅನರ್ಹಗೊಳಿಸಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.