ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಬೆಂಗಳೂರು, ಜು. 4: ವಿಜಯನಗರ ಕ್ಷೇತ್ರದ ಶಾಸಕ ಆನಂದ್ಸಿಂಗ್ ರಾಜೀನಾಮೆ ಸಂಬಂಧ ಸ್ಪೀಕರ್ ರಮೇಶ್ ಕುಮಾರ್ರಿಂದ ಮಾಹಿತಿ ಪಡೆದಿದ್ದು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸ್ಪೀಕರ್ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಆನಂದ್ಸಿಂಗ್ ರಾಜೀನಾಮೆ ಸಂಬಂಧ ಸ್ಪೀಕರ್ಗೆ ಪಕ್ಷದಿಂದ ಯಾವುದೇ ದೂರು ನೀಡಿಲ್ಲ. ಮಳೆಗಾಲದ ಅಧಿವೇಶನ ಸಂಬಂಧ ಔಪಚಾರಿಕವಾಗಿ ತಿಳಿಸಲು ಬಂದಿದ್ದೆವು ಎಂದರು.
ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಪಕ್ಷಕ್ಕೆ ಅವರು ಯಾವುದೇ ರಾಜೀನಾಮೆ ಪತ್ರ ನೀಡಿಲ್ಲ. ಅವರ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಪಡೆದಿದ್ದೇವೆ. ಈ ಬಗ್ಗೆ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು. ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವ ಶಿವಾನಂದ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story