ಮೂಡಿಗೆರೆ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಲು ಒತ್ತಾಯಿಸಿ ಧರಣಿ
ಮೂಡಿಗೆರೆ,ಜು.5: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್, ಮೂಡಿಗೆರೆ ಘಟಕದ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಫೆಡರೇಷನ್ನ ಅಧ್ಯಕ್ಷೆ ಬಲ್ಕಿಸ್ ಬಾನು ಮಾತನಾಡಿ, ರಾಜ್ಯ ಸರಕಾರ ಪ್ರಸಕ್ತ ಸಾಲಿನಿಂದ 276 ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಆದೇಶಿಸಿದ್ದು, ಈಗಾಗಲೇ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ ಅಂಗನವಾಡಿ ಕೇಂದ್ರಗಳಿಗೆ ಬರಬೇಕಾಗಿದ್ದ ಮಕ್ಕಳು ಸರಕಾರಿ ಪಬ್ಲಿಕ್ ಶಾಲೆಗಳಿಗೆ ತೆರಳುತ್ತಿದ್ದಾರೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಇದರಿಂದ ಅಂಗನವಾಡಿ ಕೇಂದ್ರಗಳು ಮುಚ್ಚುವ ಸ್ಥಿತಿಗೆ ತಲುಪಲಿದೆ. ಅಲ್ಲದೇ ಐಸಿಡಿಎಸ್ ಯೋಜನೆಯಲ್ಲಿ ಕಳೆದ ಮೂರ್ನಾಲ್ಕು ದಶಕದಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರು, ಸಹಾಯಕಿಯರು ಬೀದಿ ಪಾಲಾಗುವ ಭೀತಿ ಉಂಟಾಗಿದೆ. ಇದಕ್ಕೆ ರಾಜ್ಯ ಸರಕಾರ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಕಾರ್ಯದರ್ಶಿ ಅನುಸೂಯ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ನಡೆಸಬೇಕು. ಅದಕ್ಕಾಗಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ, ಮಕ್ಕಳಿಗೆ ಪಠ್ಯ ಪುಸ್ತಕ ಸಹಿತ ಮೂಲ ಸೌಕರ್ಯ ಒದಗಿಸಬೇಕು. ಸರಕಾರಿ ಆದೇಶದಂತೆ ಶಿಕ್ಷಕರ ವೃತ್ತಿಗೆ ಅಂಗನವಾಡಿ ಸಹಾಯಕಿಯರನ್ನೇ ನೇಮಕ ಮಾಡಬೇಕು. ಅವರಿಗೆ ಕ್ರಮವಾಗಿ 7,500 ಮತ್ತು 5,000 ರೂ ಗಳ ಮಾಸಿಕ ಗೌರವಧನ ಹೆಚ್ಚುವರಿಯಾಗಿ ನೀಡಬೇಕು. ಯುಕೆಜಿ ಮುಗಿದ ಬಳಿಕ ಮಕ್ಕಳನ್ನು ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಲು ಅಂಗನವಾಡಿ ಕೇಂದ್ರದಿಂದಲೇ ಟಿಸಿ ನೀಡುವಂತಹ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.
ಉಪಾಧ್ಯಕ್ಷೆ ವನಜಾಕ್ಷಿ, ಮೀನಾಕ್ಷಿ, ಹರಿಣಾಕ್ಷಿ, ಸುಶೀಲಾ, ಗೌರಮ್ಮ, ಲಲಿತಾ, ರಮ್ಯ, ಸ್ನೇಹ, ನವ್ಯ ಮತ್ತಿತರರು ಉಪಸ್ಥಿತರಿದ್ದರು.