ದಳವಾಯಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೈಸೂರು,ಜು.5: ನಗರದ ಮೈಸೂರು-ಊಟಿ ರಸ್ತೆಯಲ್ಲಿರುವ ದಳವಾಯಿ ಕೆರೆಗೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕುರುಬಾರಹಳ್ಳಿ ನಿವಾಸಿ ಗಾಲ್ಫ್ ಕ್ಲಬ್ ನಲ್ಲಿ ಉದ್ಯೋಗಿಯಾಗಿದ್ದ ದಿನೇಶ್ (30) ಎಂದು ಗುರುತಿಸಲಾಗಿದೆ. ಇವರ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು.
ಮೃತ ವ್ಯಕ್ತಿ ಅವಿವಾಹಿತನಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈತನ ಸಾವಿನ ಸುದ್ದಿ ತಿಳಿದು ದಳವಾಯಿ ಕೆರೆ ಬಳಿ ದೌಡಾಯಿಸಿದ ಕುಟುಂಬಸ್ಥರು ಮತ್ತು ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತು.
ಕೆರೆಯ ಬಳಿ ಮೃತನ ಸಂಬಂಧಿಕರು ಮತ್ತು ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರಿಂದ ಕೆಲ ಸಮಯ ವಾಹನ ಸವಾರರಿಗೆ ಅಡ್ಡಿಯುಂಟಾಗಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story