ಬಿಜೆಪಿ ವಿರುದ್ಧ ಸಿಎಂ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಶ್ರೀರಾಮುಲು
ಬೆಂಗಳೂರು, ಜು.12: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಮುಂದಾಗಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವ ಇಂಗಿತವೂ ಬಿಜೆಪಿ ಪಕ್ಷಕ್ಕೆ ಇಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ಶ್ರೀರಾಮುಲು ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಒಬ್ಬ ಸಚಿವನನ್ನು ನಮ್ಮ ಪಕ್ಷದ ನಾಯಕರನ್ನು ಭೇಟಿ ಮಾಡಿಸಿ ಇಂತಹ ವದಂತಿಗಳನ್ನು ಹರಡಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕುಮಾರಸ್ವಾಮಿಗೆ ಗುತ್ತಿಗೆದಾರರಿಂದ ಹಣ ಕೀಳುವುದು, ವರ್ಗಾವಣೆ ದಂಧೆ ಮೂಲಕ ಹಣ ಮಾಡುವುದು ಮಾತ್ರ ಗೊತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ಅತೀ ಹೆಚ್ಚು 105 ಸ್ಥಾನಗಳನ್ನು ಕೊಟ್ಟಿದ್ದಾರೆ. ಆದರೂ, ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಸರಕಾರ ನಡೆಸುತ್ತಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು.
ಈ ಸರಕಾರದ ಮೇಲೆ ವಿಶ್ವಾಸವಿಲ್ಲ ಎಂದು 17 ಜನ ಶಾಸಕರು ರಾಜೀನಾಮೆ ನೀಡಿದ್ದಾರೆ. ಆದರೂ, ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ. ಅವರಿಗೆ ಅಧಿಕಾರದ ಆಸೆ ಎಷ್ಟಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅವರು ಹೇಳಿದರು.