ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ
ಮಂಡ್ಯ, ಜು.27: ಬೆಂಗಳೂರು-ಮೈಸೂರು ಹೆದ್ದಾರಿಯ ಗೆಜ್ಜಲಗೆರೆ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಮಂಡ್ಯ ತಾಲೂಕು ಹೆಬ್ಬಕವಾಡಿ ಗ್ರಾಮದ ರವಿ(31) ರವಿ ಅವರ ಪತ್ನಿ ಮಂಜುಳಾ (28) ಮಕ್ಕಳಾದ ಸಾಗರ್(8) ಮತ್ತು ಸುಕನ್ಯಾ(6) ಮೃತಪಟ್ಟವರು.
ಬೆಂಗಳೂರಿನಿಂದ ಕಾರಿನಲ್ಲಿ ಕುಟುಂಬದ ಸಮೇತ ಗ್ರಾಮಕ್ಕೆ ಆಗಮಿಸುತ್ತಿದ್ದ ರವಿ ಅವರ ಮಾರುತಿ ರಿಟ್ಝ್ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಜಿಗಿದು ಮೈಸೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ತೀವ್ರ ಗಾಯಗೊಂಡಿದ್ದ ಮಂಜುಳಾ ಅವರನ್ನು ಜಿಲ್ಲಾಸ್ಪತ್ರೆಗೆ (ಮಿಮ್ಸ್) ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೆಬ್ಬಕವಾಡಿಯ ರವಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ಕೇಬಲ್ ಕನೆಕ್ಷನ್ ಮಾಡಿಕೊಂಡು ಕುಟುಂಬದ ಜತೆ ಜೀವನ ನಡೆಸುತ್ತಿದ್ದು, ಕಾರ್ಯನಿಮಿತ್ತ ಕುಟುಂಬ ಸಮೇತ ತನ್ನ ಗ್ರಾಮಕ್ಕೆ ಬರುತ್ತಿದ್ದಾಗ ಈ ಅವಘಡ ನಡೆದಿದೆ.
ಮಿಮ್ಸ್ ಆಸ್ಪತ್ರೆಯ ಶವಾಗಾರದ ಎದುರು ಮೃತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.