ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ನಿಷೇಧ: ಚಿಕ್ಕಮಗಳೂರು ಜಿಲ್ಲಾಧಿಕಾರಿ
ಚಿಕ್ಕಮಗಳೂರು, ಆ.7: ಜಿಲ್ಲೆಯ ಕೊಟ್ಟಿಗೆಹಾರದಿಂದ ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಮಾಡಿ ಘಾಟ್ನ ಹೆದ್ದಾರಿಯ ಸುತ್ತಮುತ್ತ ಎಡಬಿಡದೆ ಮಳೆಯಾಗುತ್ತಿದ್ದು, ಘಾಟಿ ರಸ್ತೆಯ ಅನೇಕ ಕಡೆ ಮಣ್ಣು ಕುಸಿತವಾಗಿದೆ ಹಾಗೂ ಅನೇಕ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಆ.7 ಮತ್ತು 8ರಂದು ಚಾರ್ಮಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದರು.
ಮೂಡಿಗೆರೆ, ಬಾಳೆಹೊನ್ನೂರು, ಕೊಟ್ಟಿಗೆಹಾರದಿಂದ ಮಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರು ಶಿರಾಡಿಘಾಟ್ ಇಲ್ಲವೇ ಕುದುರೆಮುಖದ ಮಾರ್ಗವಾಗಿ ಎಸ್.ಕೆ.ಬಾರ್ಡರ್ ಮೂಲಕ ಸಂಚಾರ ಮಾಡಬಹುದಾಗಿದೆ. ಮಂಗಳವಾರ ರಾತ್ರಿ ಚಾರ್ಮಾಡಿ ಘಾಟ್ನ ಅನೇಕ ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮಣ್ಣು ಮತ್ತು ಮರಗಳ ತೆರವು ಕಾರ್ಯಾಚರಣೆ ಮಂಗಳವಾರ ರಾತ್ರಿಯಿಂದಲೇ ನಡೆಸಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರವನ್ನು ಬುಧವಾರ ಬೆಳಗ್ಗೆಯಿಂದಲೇ ಬಂದ್ ಮಾಡಲಾಗಿದೆ ಎಂದರು.
ಮಲೆನಾಡು ಭಾಗದಲ್ಲಿ ಕಳೆದ ಆರು ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ರಸ್ತೆ ಮತ್ತು ಜಮೀನುಗಳಿಗೆ ಹಾನಿಯಾಗಿದೆ. ನಾನು ಮತ್ತು ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಅಶ್ವತಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಮಂಗಳವಾರ ಮಳೆಹಾನಿ ಪ್ರದೇಶಗಳಿಗೆ ಭೇಟಿನೀಡಿ ಪರಿಶೀಲನೆ ನಡೆಸಿದ್ದೇವೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಮಂಗಳವಾರ ಜಯಪುರ ಹಾಗೂ ಚಿಕ್ಕಮಗಳೂರು ಸಂಪರ್ಕಿಸುವ ರಸ್ತೆಯಲ್ಲಿ 100 ಮೀ. ಭೂಕುಸಿತವಾಗಿದೆ. ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖಾಧಿಕಾರಿಗಳು ಸ್ಥಳದಲ್ಲಿದ್ದು ಅಗತ್ಯ ಕ್ರಮಕೈಗೊಂಡಿದ್ದಾರೆ. ಜಯಪುರ ಹಾಗೂ ಶೃಂಗೇರಿ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ 7ರಿಂದ8 ಕಡೆಗಳಲ್ಲಿ ಬಂಡೆ ಹಾಗೂ ಗುಡ್ಡದ ಮಣ್ಣು ಕುಸಿದಿದೆ. ಬಂಡೆ ಹಾಗೂ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಪಿಡ್ಲ್ಯೂಡಿ ಇಲಾಖೆ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಮಂಗಳವಾರ ಶೃಂಗೇರಿಯ ತುಂಗಾನದಿ ಸಮೀಪದ ರಸ್ತೆ ನೀರಿನಲ್ಲಿ ಮುಳುಗಿದೆ. ಕಪ್ಪೆ ಶಂಕರ ಮಂಟಪವೂ ಮುಳುಗಿದೆ. ಹೊರನಾಡು ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಿದೆ. ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ರಾತ್ರಿ ಅನೇಕ ಕಡೆಗಳಲ್ಲಿ ಗುಡ್ಡಕುಸಿತ ಮತ್ತು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾತುಕತೆ ನಡೆಸಿ ರಸ್ತೆ ತೆರವು ಕಾರ್ಯಚರಣೆ ನಡೆಸಲಾಗಿದೆ. ಮಳೆ ಮುಂದುವರಿದರಿದರೆ ಅನೇಕ ಕಡೆಗಳಲ್ಲಿ ಗುಡ್ಡ ಕುಸಿಯುವ ಸಂಭವ ಇರುವುದರಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎಂದು ತಿಳಿಸಿದರು.
ಭಾರೀ ಮಳೆ ಹಾಗೂ ಪ್ರಾಕೃತಿಕ ವಿಕೋಪಗಳ ಹಿನ್ನೆಲೆಯಲ್ಲಿ ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ 45 ಕಡೆಗಳಲ್ಲಿ 76 ಪುನರ್ವಸತಿ ಕೇಂದ್ರಗಳನ್ನು ತೆರೆಯಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ತೆರೆಯಲಾಗಿದೆ. ಮಂಗಳವಾರ ಕಲ್ಲತ್ತಗಿರಿ ವೀರಭದ್ರೇಶ್ವರ ದೇವಾಲಯದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿ ಹಂತೂರು ಗ್ರಾಮದ ಹೇಮಾವತಿ ನದಿಪಾತ್ರದ ಬಳಿ ಇಸ್ಕಾನ್ ಬ್ರಾಹ್ಮಣ ಕುಟುಂಬದವರು ನಡುನೀರಿನಲ್ಲಿ ಸಂಕಷ್ಟದಲ್ಲಿದ್ದರು. ಪೊಲೀಸರು ಹಾಗೂ ಸ್ಥಳೀಯರು ಸಂಕಷ್ಟದಲ್ಲಿದ್ದ 8 ಜನರನ್ನು ಹಾಗೂ ಮೂರು ಹಸುಗಳನ್ನು ರಕ್ಷಿಸಿದ್ದಾರೆ ಎಂದರು.
ಮಳೆಯಿಂದ ಯಾರಿಗೂ ತೊಂದರೆಯಾಗದಂತೆ ರಕ್ಷಣೆಗೆ ಎಲ್ಲ ತಾಲೂಕುಗಳ ನೋಡೆಲ್ ಅಧಿಕಾರಿಗಳು 24ಗಂಟೆ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಮಳೆ ಪ್ರವಾಹದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.
-ಡಾ.ಬಗಾದಿ ಗೌತಮ್, ಜಿಲ್ಲಾಧಿಕಾರಿ.