ರಾಜ್ಯ ಸರಕಾರ ಮನವಿ ಸಲ್ಲಿಸಿದರೆ ಕೇಂದ್ರದಿಂದ ಅನುದಾನ: ಪ್ರಹ್ಲಾದ್ ಜೋಶಿ ಬೇಜವಾಬ್ದಾರಿ ಹೇಳಿಕೆ
ಬೆಂಗಳೂರು, ಆ. 8: ‘ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ನೆರೆ ಪರಿಹಾರಕ್ಕೆ ರಾಜ್ಯ ಸರಕಾರ ನೆರವು ಕೋರಿ ಮನವಿ ಸಲ್ಲಿಸಿದರೆ ಕೇಂದ್ರ ಸರಕಾರ ಕೂಡಲೇ ಅನುದಾನ ನೀಡಲಿದೆ’ ಎಂದು ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಜವಾಬ್ದಾರಿ ಮರೆತು ನಿರ್ಲಕ್ಷ್ಯದ ಹೇಳಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ಧಾರವಾಡ ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳ ಜನತೆ ಭಾರೀ ಮಳೆ-ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಕ್ಷರಶಃ ನಡುಗಡ್ಡೆಗಳಲ್ಲಿ ಸಿಲುಕಿದ್ದಾರೆ. ಆದರೆ, ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ನನಗೆ ಪ್ರವಾಹ ಪರಿಸ್ಥಿತಿಯ ಪ್ರದೇಶಗಳ ಪರಿಶೀಲನೆಗೆ ಸೂಚಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ಕೆಲ ಪ್ರಕ್ರಿಯೆಗಳು ಇರುತ್ತವೆ. ಅದೇ ರೀತಿಯಲ್ಲಿ ರಾಜ್ಯ ಸರಕಾರ ನೆರೆ ಸಂತ್ರಸ್ತರ ನೆರವಿಗೆ ಹೆಲಿಕಾಫ್ಟರ್ ಸೇರಿದಂತೆ ಅನುದಾನ ಕೋರಿ ಮನವಿ ಸಲ್ಲಿಸಬೇಕು. ಆ ಬಳಿಕ ಕೇಂದ್ರದಿಂದ ನೆರವು ಕೊಡಿಸಲು ಕ್ರಮ ವಹಿಸಲಾಗುವುದು ಎಂದು ಜೋಶಿ ತಿಳಿಸಿದರು.