ಅಪಘಾತ ತಪ್ಪಿಸಲು ನೇರ ರಸ್ತೆ ನಿರ್ಮಿಸಿ: ಶಾಸಕ ಸಿ.ಟಿ.ರವಿ
ಚಿಕ್ಕಮಗಳೂರು, ಆ.15: ಅಪಘಾತಗಳನ್ನು ತಪ್ಪಿಸಲು ರಾಷ್ಟ್ರೀಯ ಹೆದ್ದಾರಿಯ ತಿರುವುಗಳನ್ನು ಕಡಿಮೆ ಮಾಡಿ ನೇರ ರಸ್ತೆ ನಿರ್ಮಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಗುರುವಾರ ಕಡೂರು-ಚಿಕ್ಕಮಗಳೂರು-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ 173 ರಸ್ತೆಯ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಈಗಾಗಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು 297 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕಡೂರಿನಿಂದ ಪ್ರಾರಂಭ ಮಾಡಲಾಗಿದೆ. ಸುಪ್ರೀಂ ಕೋರ್ಟ್ನ ನಿರ್ದೇಶನದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ತಿರುವುಗಳನ್ನು ಕಡಿಮೆ ಮಾಡಿ ಅಪಘಾತ ತಪ್ಪಿಸಲು ನೇರ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಕಾಮಗಾರಿಯ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದ್ದು, ಯಾವ ಸಂದರ್ಭಕ್ಕೆ ಎಷ್ಟು ತಿಂಗಳಿಗೆ ಎಷ್ಟು ಕೆಲಸ ಮಾಡಬೇಕೆಂದು ನಿರ್ದೇಶಿಸಿ ರಾಷ್ಟ್ರೀಯ ಹೆದ್ದಾರಿಯಿಂದ ಮಾನಿಟರ್ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಕಲ್ಮರುಡಪ್ಪ, ಶ್ರೀನಿವಾಸ, ಹಾಸನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥೆ ಅರ್ಚನಾ, ಎಇಇ ಮುನಿರಾಜ್, ಎಇ ಶಶಿಕುಮಾರ್, ಗುತ್ತಿಗೆದಾರ ವಿ.ಎನ್.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.