ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸಿದರೆ ಎಲ್ಲವೂ ಸಿಕ್ಕಂತೆ: ಆರೋಗ್ಯ ಸಚಿವ ಬಿ.ಶ್ರೀರಾಮುಲು
ಬಳ್ಳಾರಿ, ಆ. 28: ನಾನು ಉಪಮುಖ್ಯಮಂತ್ರಿ ಆಗುವುದು ಮುಖ್ಯವಲ್ಲ. ನಾನು ಪ್ರತಿನಿಧಿಸುವ ವಾಲ್ಮೀಕಿ ಸಮುದಾಯದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಿದರೆ ನನಗೆ ಎಲ್ಲವೂ ಸಿಕ್ಕಂತೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಯಾರೂ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬಾರದು ಎಂದು ಸಮುದಾಯದವರಲ್ಲಿ ಮನವಿ ಮಾಡುವೆ ಎಂದರು.
ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವ ಕುರಿತು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಶಿವನಗೌಡ ನಾಯಕ, ರಾಜುಗೌಡ ಸೇರಿ ಸಮಾಜದ ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ ಎಂದರು.
ಪಕ್ಷ ತಾಯಿ ಇದ್ದಂತೆ. ಅದರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಯಾರೂ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ಮಾಡಬಾರದು. ಪಕ್ಷವು ಎಲ್ಲರಿಗೂ ನ್ಯಾಯ ಕೊಡಲಿದೆ. ಪ್ರತಿಭಟನೆ ಮಾಡದಂತೆ ನಿನ್ನೆಯೇ ಬೆಂಬಲಿಗರಲ್ಲಿ ಮನವಿ ಮಾಡಿದ್ದೆ. ಈಗ ಮತ್ತೊಮ್ಮೆ ಕೋರುತ್ತಿದ್ದೇನೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ನೀಡಬೇಕೆಂದು ಬೇಡಿಕೆ ಇಟ್ಟಿಲ್ಲ ಎಂದರು.