ಪ್ರವಾಹ ಸಂತ್ರಸ್ತರಿಗೆ ಶೀಘ್ರವೇ ಪರಿಹಾರಧನ ಬಿಡುಗಡೆ: ಡಿಸಿಎಂ ಗೋವಿಂದ ಕಾರಜೋಳ
ಹುಬ್ಬಳ್ಳಿ, ಆ.31: ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನಿರಾಶ್ರಿತರ ಪರಿಹಾರದ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಾಗಲಕೋಟಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದೇನೆ. ನಿರಾಶ್ರಿರತರ ರಕ್ಷಣೆ ಹಾಳಾದ ರಸ್ತೆ, ಸೇತುವೆ ನಿರ್ಮಾಣ ಮಾಡಲಾಗುವುದು. ಎರಡು ದಿನ ಬಾಗಲಕೋಟಿಯಲ್ಲಿದ್ದು, ನಂತರ ಮೈಸೂರು, ಮಂಗಳೂರು, ಕೊಡಗು ಜಿಲ್ಲೆಯ ಪ್ರವಾಸ ಕೈಗೊಳ್ಳಲಾಗುವುದು ಎಂದರು.
ಸಂಪರ್ಕ ರಸ್ತೆಗಳ ದುರಸ್ತಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗುತ್ತಿದೆ. ಸೆ.7ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿ ನೆರೆ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಕೇಂದ್ರ ಅಧ್ಯಯನ ತಂಡ ಬಂದು ಹೋಗಿದೆ. ಶೀಘ್ರವೇ ಪರಿಹಾರ ಧನ ಬಿಡುಗಡೆಯಾಗಲಿದೆ ಎಂದರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ ಈ.ಡಿ. ವಿಚಾರಣೆ ಸಂಬಂಧಿಸಿ ಮಾಧ್ಯಮದವರ ಪ್ರಶ್ನೆಗೆ ಉಪಮುಖ್ಯಮಂತ್ರಿ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಅವರ ವಿಚಾರಣೆ ನಡೆದಿದ್ದು, ಈಗಲೇ ಏನು ಹೇಳುವುದಿಲ್ಲ ಎಂದರು.