ಡಿಕೆಶಿ ಬಂಧನದ ಮೂಲಕ ಕಾಂಗ್ರೆಸ್ ಶಕ್ತಿ ಕುಗ್ಗಿಸುವ ಯತ್ನ: ಮಾಜಿ ಸಚಿವ ಚಲುವರಾಯಸ್ವಾಮಿ
ಮಂಡ್ಯ, ಸೆ.5: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಈ.ಡಿ ಬಳಸಿಕೊಂಡು ಬಂಧಿಸುವ ಮೂಲಕ ಕಾಂಗ್ರೆಸ್ ಶಕ್ತಿಯನ್ನು ಕುಗ್ಗಿಸುವ ಯತ್ನ ನಡೆದಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದ್ದಾರೆ.
ಗುರುವಾರ ಕಾಂಗ್ರೆಸ್ ಮುಖಂಡರ ಜತೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ದುರಾಡಳಿತದ ವಿರುದ್ಧ ಜಿಲ್ಲೆಯಾದ್ಯಂತ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ ಎಂದರು.
ಜಾರಿ ನಿರ್ದೇಶನಾಲಯ(ಈ.ಡಿ)ದ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದರೂ ಡಿಕೆಶಿ ಅವರನ್ನು ಬಂಧಿಸಿರುವುದು ರಾಜಕೀಯ ಉದ್ದೇಶ ಅನ್ನೋದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಡಿಕೆಶಿ ಕಾನೂನು ಸಂಕಷ್ಟದಿಂದ ಗೆದ್ದು ಬರುವ ವಿಶ್ವಾಸ ಇದೆ ಎಂದ ಅವರು, ಕೇಂದ್ರ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಫ್ರೀಯಾಗಿ ಬಿಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದರು.
ಮಾಜಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ, ಎಂ.ಎಸ್.ಆತ್ಮಾನಂದ, ಮಾಜಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಎಚ್.ಬಿ.ರಾಮು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಪಿ.ಗಣಿಗ ರವಿಕುಮಾರ್, ಇತರೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.