ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ
ಮೈಸೂರು, ಸೆ.7: ತುಂಬಿ ತುಳುಕುತ್ತಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಬಾಗಿನ ಅರ್ಪಿಸಿದರು.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಶನಿವಾರ ಪೂರ್ವಾಹ್ನ 11 ಗಂಟೆ ವೇಳೆ ಕಬಿನಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ಸಿಎಂ ಯಡಿಯೂರಪ್ಪ, ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಅತಿವೃಷ್ಟಿ ಸಂಭವಿಸಿರುವ ಪ್ರದೇಶಗಳ ಜನರಿಗೆ ಈಗಾಗಲೇ ತಾತ್ಕಾಲಿಕ ಪರಿಹಾರ ನೀಡಲಾಗಿದೆ ಎಂದು ಹೇಳಿದರು.
ಕೇಂದ್ರದದ ಹೆಚ್ಚಿನ ಪರಿಹಾರ ಬರುವ ನಿರೀಕ್ಷೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದರು.
ಕಬಿನಿ ಜಲಾಶಯ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಆದಷ್ಟು ಬೇಗ ಈಡೇರಿಸಲಾಗುವುದು. ಈ ಭಾಗದ ಕಬಿನಿ ಸೇತುವೆಯನ್ನು 30 ಕೋಟಿ.ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು, ಕಬಿನಿ ಜಲಾಶಯದ ಅಕ್ಕ ಪಕ್ಕದಲ್ಲಿ ಬೃಂದಾವನ ನಿರ್ಮಾಣ ಮಾಡಲಾಗುವುದು. ಹಾಗೆ ಕಬಿನಿ ಜಲಾಶಯ ದಿಂದ ಹ್ಯಾಂಡ್ ಪೋಸ್ಟ್ ವರೆಗಿನ ರಸ್ತೆಯನ್ನು ಶೀಘ್ರದಲ್ಲಿ ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು.
ವಸತಿ ಹಾಗೂ ಮೈಸೂರು ಉಸ್ತುವಾರಿ ಸಚಿವ ವಿ.ಸೋಮಣ್ಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್, ಎಸ್ಪಿ ರಿಷ್ಯಂತ್, ಜಿ.ಪಂ. ಸಿಇಓ ಕೆ.ಜ್ಯೋತಿ, ಕಾವೇರಿ ನೀರಾವರಿ ನಿಗಮದ ಎಇಇ ಸುಜಾತ, ಮಾಜಿ ಶಾಸಕ ಎಚ್.ಸಿ.ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.