ಬಂದ್ ಪ್ರಶ್ನಿಸಿ ಪಿಐಎಲ್: ರಾಜ್ಯದಲ್ಲಿ ಆಗಿರುವ ನಷ್ಟದ ಬಗ್ಗೆ ಮಾಹಿತಿ ನೀಡಿ- ಹೈಕೋರ್ಟ್
ಬೆಂಗಳೂರು, ಸೆ.12: ಕಳೆದ ವರ್ಷ ಪ್ರೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಂದ್ ಆಚರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ 2018ರಿಂದ ಇಲ್ಲಿಯವರೆಗೆ ಬಂದ್ ವೇಳೆ ಆಗಿರುವ ನಷ್ಟದ ಕುರಿತು ಮಾಹಿತಿ ನೀಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಈ ಕುರಿತು ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘ, ನಾಗರಾಜ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಎನ್.ಪಿ.ಅಮೃತೇಶ್ ಅವರು, ಡಿಕೆಶಿ ಬಂಧನ ಖಂಡಿಸಿ ಕನಕಪುರ, ರಾಮನಗರ ಸೇರಿ ಇತರೆ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಹಾಗೂ ಕೆಎಸ್ಸಾರ್ಟಿಸಿ ಬಸ್ಗಳಿಗೆ ಬೆಂಕಿ ಹಚ್ಚಿ ಕೋಟ್ಯಂತರ ರೂ.ನಷ್ಟ ಉಂಟು ಮಾಡಲಾಗಿದೆ. ಪೊಲೀಸರು ರಾಜಕೀಯ ಮುಖಂಡರ ಮೇಲೆ ಯಾವುದೇ ದೂರನ್ನು ದಾಖಲಿಸದೆ, ಅಮಾಯಕರ ಮೇಲೆ ದೂರನ್ನು ದಾಖಲಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಪ್ರಕರಣ ದಾಖಲಿಸಿರುವ ಹಾಗೂ ಬಂದ್ನಿಂದ ಹಾನಿಯಾಗಿರುವ ಕುರಿತು ನಿಮ್ಮ ಬಳಿ(ಅರ್ಜಿದಾರರ ಪರ ವಕೀಲರಿಗೆ) ದಾಖಲೆಗಳಿದ್ದರೆ ಮುಂದಿನ ವಿಚಾರಣೆ ವೇಳೆ ಪೀಠಕ್ಕೆ ಸಲ್ಲಿಸಿ ಎಂದು ಸೂಚಿಸಿತು. ಸರಕಾರದ ಪರ ವಾದಿಸಿದ ವಕೀಲ ಪಿ.ಬಿ.ಅಚ್ಚಪ್ಪ ಅವರು, ಹತ್ತು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಅಹಿತಕರ ಘಟನೆಗಳ ಬಗ್ಗೆ ಪಟ್ಟಿ ಮಾಡಲಾಗಿದೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಂದ್ ವೇಳೆ ಆಗಿರುವ ನಷ್ಟದ ಕುರಿತು ಮಾಹಿತಿ ನೀಡಲು ಸೂಚಿಸಿ, ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿತು.