ಕನ್ನಡದಲ್ಲಿ ಬರೆದುಕೊಟ್ಟಿದ್ದರೂ ಓದಲಾಗದೇ ಹಿಂದಿಯಲ್ಲಿ ಭಾಷಣ ಮಾಡಿದ ಸಚಿವ ಪ್ರಭು ಚೌವ್ಹಾಣ್
ಬೀದರ್, ಸೆ.17: ಜಿಲ್ಲಾಡಳಿತದ ವತಿಯಿಂದ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ‘ಕಲ್ಯಾಣ ಕರ್ನಾಟಕ ಉತ್ಸವ’ದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಅಲ್ಲದೆ, ಅದರಲ್ಲಿಯೂ ತಪ್ಪು ಅಂಶಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಜಿಲ್ಲಾಡಳಿತದ ಅಧಿಕಾರಿಗಳು ಸ್ಪಷ್ಟವಾಗಿ ಕನ್ನಡದಲ್ಲಿ ನಾಲ್ಕು ಪುಟಗಳ ಭಾಷಣವನ್ನು ಬರೆದುಕೊಟ್ಟಿದ್ದರೂ ಓದಲು ಸಾಧ್ಯವಾಗದೇ ಹಿಂದಿಯಲ್ಲಿ ಭಾಷಣ ಮಾಡಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.
ತಪ್ಪು ಉಲ್ಲೇಖ: ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕಕ್ಕೆ ಸ್ವಾತಂತ್ರ ದೊರೆತಿರಲಿಲ್ಲ. ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಬೇಕು ಎಂದು ಸಂತರ, ಸ್ವಾಮಿಗಳ ಬೇಡಿಕೆ ಇತ್ತು ಎಂದು ತಪ್ಪಾಗಿ ಪ್ರಸ್ತಾಪಿಸಿ, ಮುಜುಗರಕ್ಕೀಡಾದರು.
ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿವೆ. ಭ್ರಷ್ಟಾಚಾರ ನಿರ್ಮೂಲನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ. 70 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳಿವೆ. ಹೊಸ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಹೆಚ್ಚಿನ ನೆರವು ತರಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ರಹೀಂ ಖಾನ್, ಬಂಡೆಪ್ಪಕಾಶೆಂಪೂರ ಸೇರಿದಂತೆ ಹಲವರಿದ್ದರು.