ನೆರೆ ಪೀಡಿತ ರಸ್ತೆ, ಸೇತುವೆ ಪುನರ್ ನಿರ್ಮಾಣಕ್ಕೆ 40.45 ಕೋಟಿ ಬಿಡುಗಡೆಗೆ ಕ್ರಮ: ಡಿಸಿಎಂ ಕಾರಜೋಳ
ಗದಗ, ಸೆ. 20: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ರಸ್ತೆ, ಸೇತುವೆ, ಸರಕಾರಿ ಕಟ್ಟಡಗಳ ಮಾಹಿತಿ ಪಡೆದು ಅವುಗಳ ಶಾಶ್ವತ ಪುನರ್ ನಿರ್ಮಾಣಕ್ಕೆ ಅಗತ್ಯವಾದ 40.45 ಕೋಟಿ ರೂ.ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭರವಸೆ ನೀಡಿದ್ದಾರೆ.
ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ತಾತ್ಕಾಲಿಕ ಸಂಪರ್ಕಕ್ಕೆ ದುರಸ್ತಿ ಕಾರ್ಯ ಚುರುಕುಗೊಳಿಸಲು ನಿರ್ದೇಶನ ನೀಡಿದರು.
ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ಸ್ವಚ್ಛತೆ, ನಿರ್ವಹಣೆ, ಸೌಲಭ್ಯ ನೀಡುವಿಕೆಯಲ್ಲಿ ಲೋಪವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗುವುದು ಎಂದು ಗೋವಿಂದ ಕಾರಜೋಳ ಇದೇ ವೇಳೆ ಎಚ್ಚರಿಕೆ ನೀಡಿದರು
ಇಲಾಖೆಯ ಎಲ್ಲ ನಿಗಮಗಳು ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ಫಲಾನುಭವಿಗಳ ಪಟ್ಟಿ ತಯಾರಿಕೆ ಶೀಘ್ರ ಪೂರ್ಣಗೊಳಿಸಿ ಸೌಲಭ್ಯ ವಿತರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.