ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ಅ. 13: ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ದಾಳಿ ರಾಜಕೀಯ ಪ್ರೇರಿತವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ರವಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ನೀಡದೆ ಹಣ ದೋಚುವ ಕೆಲಸವನ್ನು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಮಾಡಿದೆ ಎಂದು ದೂರಿದರು.
ಕೋಟ್ಯಂತರ ರೂ.ಹಣವನ್ನು ದೋಚಿರುವ ಸಂಬಂಧ ಮಾಧ್ಯಮಗಳಲ್ಲಿ ವರದಿ ಬಂದಿದೆ. ಆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ, ಈ ದಾಳಿಯ ಹಿಂದೆ ಯಾವುದೇ ರಾಜಕೀಯ ಪ್ರೇರಿತವಾಗಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಮುಖಂಡರ ಮೇಲಷ್ಟೇ ಐಟಿ ದಾಳಿ ನಡೆಯುತ್ತಿಲ್ಲ. ಬದಲಿಗೆ ಬಿಜೆಪಿ ಮುಖಂಡರ ಮೇಲೆಯೂ ದಾಳಿ ನಡೆಸಿರುವ ಉದಾಹರಣೆಗಳಿವೆ ಎಂದ ಅವರು, ಡಾ.ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿರುವುದು ದುರ್ದೈವ. ಸಣ್ಣ-ಪುಟ್ಟ ಮಕ್ಕಳಿದ್ದಾರೆ. ಅವರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಮಾಡಬಾರದಿತ್ತು ಎಂದರು.
ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರವಾಗಿದೆ. ಈ ಹಿನ್ನೆಲೆಯಲ್ಲಿ ರಮೇಶ ಅವರ ಮನೆಗೆ ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಪರಮೇಶ್ವರ್ ಅವರ ಜೊತೆ ರಮೇಶ್ ಸುಮಾರು ವರ್ಷಗಳಿಂದ ಇದ್ದರು. ಹೀಗಾಗಿ ಐಟಿ ಅಧಿಕಾರಿಗಳು ಪ್ರಶ್ನಿಸಿರಬಹುದು. ಆದರೆ, ಐಟಿ ಅಧಿಕಾರಿಗಳು ಪ್ರಶ್ನಿಸಿದ್ದರಿಂದಲೇ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪವನ್ನು ನಾನು ಯಾವುದೇ ಈ ಕಾರಣಕ್ಕೂ ಒಪ್ಪುವುದಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿದ್ದು ಶೀಘ್ರದಲ್ಲೆ ಸತ್ಯ ಎಲ್ಲರಿಗೂ ಗೊತ್ತಾಗಲಿದೆ ಎಂದು ಜೋಶಿ ಹೇಳಿದರು.