ಎನ್ಆರ್ಸಿ ಕೈ ಬಿಡುವ ಪ್ರಶ್ನೆಯೇ ಇಲ್ಲ: ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು, ಅ.22: ಎನ್ಆರ್ಸಿಯನ್ನು ಕೈ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎನ್ಆರ್ಸಿಯ ನೀತಿಯನ್ನು ಕೇಂದ್ರ ಸರಕಾರ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಈಗ ಸದ್ಯಕ್ಕೆ ರಾಜ್ಯದಲ್ಲಿ ಮಾಹಿತಿ ಸಂಗ್ರಹ ಮಾಡುತ್ತಿದ್ದು, ಅದನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯಕ್ಕೆ ಕಳುಹಿಸಿಕೊಡುತ್ತೇವೆ. ಆನಂತರ, ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ನೆಲಮಂಗಲ ಬಳಿ ನಿರ್ಮಾಣವಾಗುತ್ತಿರುವ ಡಿಟೆನ್ಷನ್ ಸೆಂಟರ್(ಸೆರೆ ಕೇಂದ್ರ)ಗೂ ಎನ್ಆರ್ಸಿಗೂ ಯಾವುದೇ ರೀತಿಯಲ್ಲಿ ಸಂಬಂಧ ಇಲ್ಲ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಸೆರೆ ಕೇಂದ್ರ ನಿರ್ಮಿಸಲಾಗುತ್ತಿದ್ದು, ಶೀಘ್ರದಲ್ಲೆ ಕಾರ್ಯಾರಂಭ ಮಾಡಲಿದೆ ಎಂದು ಬೊಮ್ಮಾಯಿ ತಿಳಿಸಿದರು.
ಪಾಸ್ಪೋರ್ಟ್ ಹಾಗೂ ವೀಸಾ ಅವಧಿ ಮುಗಿದ ಬಳಿಕವೂ ಯಾರು ಇಲ್ಲೇ ವಾಸವಾಗಿರುತ್ತಾರೋ ಅಂತಹವರನ್ನು ಪತ್ತೆ ಹಚ್ಚಿ ಡಿಟೆನ್ಷನ್ ಸೆಂಟರ್ಗೆ ತೆಗೆದುಕೊಂಡು ಹೋಗುತ್ತೇವೆ. ಆನಂತರ, ಅಲ್ಲಿಂದ ಹೊಸದಿಲ್ಲಿಯ ಸಂಬಂಧಪಟ್ಟ ಆಯಾ ದೇಶದ ರಾಯಭಾರಿ ಕಚೇರಿಗಳಿಗೆ ಕಳುಹಿಸಿ, ಅಲ್ಲಿಂದ ಅವರ ದೇಶಕ್ಕೆ ಕಳುಹಿಸುವ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯದ ಪೊಲೀಸರು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳ ಪೊಲೀಸರ ಜೊತೆ ಸೇರಿ ಎಲ್ಲ ಆಯಾಮಗಳಿಂದ ತನಿಖೆ ಮಾಡುತ್ತಿದ್ದಾರೆ. ಈವರೆಗೆ ಘಟನೆಗೆ ಸಂಬಂಧಿಸಿದಂತೆ ಯಾರೊಬ್ಬರನ್ನೂ ಬಂಧಿಸಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.
ಸ್ಫೋಟಕವನ್ನು ಎಲ್ಲಿಂದ ಕಳುಹಿಸಲಾಗಿತ್ತು, ಅದು ಅಲ್ಲಿಗೆ ಹೇಗೆ ಬಂತು ಅನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಯಾವುದನ್ನು ಬಹಿರಂಗವಾಗಿ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.