ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ರಕ್ಷಣೆ ಅಗತ್ಯವಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಅ. 30: 'ಬಿಜೆಪಿ ಸರ್ಕಾರ ಬೀಳಲು ಅವಕಾಶ ನೀಡುವುದಿಲ್ಲವೆಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಸ್ವಾಗತಾರ್ಹ. ಆದರೆ ಅಲ್ಲಿಯವರೆಗೂ ಹೋಗುವ ಅವಶ್ಯಕತೆಯಿಲ್ಲ. ನಮಗೆ ಪೂರ್ಣ ಬಹುಮತವಿದೆ. ಜೆಡಿಎಸ್ ರಕ್ಷಣೆ ಬೇಡ' ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪೂರ್ಣ ಬಹುಮತದೊಂದಿಗೆ ಸರ್ಕಾರ ಮುನ್ನಡೆಸುತ್ತೆವೆ. ಒಂದು ವೇಳೆ ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ನಡೆದರೆ, 15 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಪಕ್ಷ ಜಯ ಗಳಿಸುತ್ತದೆ. ಪೂರ್ಣಾವಧಿ ಪೂರೈಸಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನೆರೆ ಸಂತ್ರಸ್ತರಿಗೆ ನೆರವಿನ ವಿಷಯಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಗೆ ಸತ್ಯಕ್ಕೆ ದೂರವಾದದ್ದು. ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರ ಪರವಾಗಿ ತನ್ನ ಶಕ್ತಿ ಮೀರಿ ನೆರವು ಕಲ್ಪಿಸುತ್ತಿದೆ. ಎಲ್ಲ ರೀತಿಯ ನೆರವು ಕಲ್ಪಿಸುತ್ತಿದೆ. ಹಾಗೆಯೇ ಸಾರ್ವಜನಿಕರು, ಸಂಘಸಂಸ್ಥೆಗಳು ಕೂಡ ಸರ್ಕಾರಕ್ಕೆ ಕೈಜೋಡಿಸುವ ಕಾರ್ಯ ನಡೆಸುತ್ತಿವೆ ಎಂದು ಹೇಳಿದರು.
ಈಗಾಗಲೇ ಸಂತ್ರಸ್ತರಿಗೆ ತಲಾ 10 ಸಾವಿರ ರೂ. ಹಾಗೂ ಮನೆ ಕಟ್ಟಿಕೊಳ್ಳಲು 1 ಲಕ್ಷ ರೂ. ಬಿಡುಗಡೆ ಮಾಡಿದೆ. ಇಷ್ಟಾದರೂ ಕೂಡ ಸಿದ್ದರಾಮಯ್ಯರವರು, ಸಂತ್ರಸ್ತರಿಗೆ ಸರ್ಕಾರ ನೆರವಾಗುತ್ತಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ಮತ್ತೆ ಎಂದಿಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು
ಕಾಂಗ್ರೆಸ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲ ಕಾಣಿಸಿಕೊಂಡಿತ್ತು. ಆದರೆ ಸರ್ಕಾರ ನೆರವಿಗೆ ಧಾವಿಸಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಗೆ ಭೇಟಿ ನೀಡಲಿಲ್ಲ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡಿತು ಎಂದು ಟೀಕಿಸಿದರು.