ತನ್ವೀರ್ ಸೇಠ್ ಕೊಲೆಯತ್ನ ಪ್ರಕರಣ: ಎರಡು ದಿನಗಳಲ್ಲಿ ಸತ್ಯಾಂಶ ಬಯಲು; ಗೃಹ ಸಚಿವ ಬಸವರಾಜ ಬೊಮ್ಮಾಯಿ
ಮೈಸೂರು,ನ.20: ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವ ಆರೋಪಿ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಲ್ಲಿ ಕೆಲಸ ಮಾಡಿದ್ದ ಎಂಬ ಅಂಶ ತಿಳಿದು ಬಂದಿದ್ದು ಇನ್ನು 2 ದಿನಗಳಲ್ಲಿ ತನಿಖೆ ಮುಕ್ತಾಯವಾಗಲಿದ್ದು ಬಳಿಕ ನಿಜಾಂಶ ಗೊತ್ತಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ತನ್ವೀರ್ ಸೇಠ್ ಅವರನ್ನು ಭೇಟಿ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನ್ವೀರ್ ಸೇಠ್ ಚೇತರಿಸಿಕೊಳ್ಳುತಿದ್ದಾರೆ. ಇನ್ನೆರಡು ದಿನಗಳಲ್ಲಿ ವಾರ್ಡ್ಗೆ ಶಿಫ್ಟ್ ಆಗಲಿದ್ದಾರೆ. ಈ ರೀತಿಯ ಘಟನೆಗಳು ಸಂಭವಿಸುವುದು ವಿರಳ. ಆದರೆ ಇನ್ನು ಮೇಲೆ ನಾವು ಜಾಗೃತರಾಬೇಕು. ಈ ಹಿನ್ನಲೆಯಲ್ಲಿ ಎಲ್ಲಾ ಶಾಸಕರಿಗೂ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಯ ವಿಚಾರಣೆ ಚುರುಕಾಗಿ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತನಿಖೆ ಮುಕ್ತಾಯಗೊಳ್ಳಲಿದೆ. ಮೇಲ್ನೋಟಕ್ಕೆ ಈ ಹಲ್ಲೆ ರಾಜಕೀಯ ಉದ್ದೇಶದಿಂದ ನಡೆದಿರುಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ತನಿಖೆ ನಂತರ ಎಲ್ಲ ಗೊತ್ತಾಗಲಿದೆ ಎಂದು ತಿಳಿಸಿದರು.