ಸಿದ್ದರಾಮಯ್ಯಗೆ ನನ್ನ ಮೇಲೆ ಪ್ರೀತಿ ಹೆಚ್ಚಾಗಿದೆ: ಬಿ.ಶ್ರೀರಾಮುಲು
ಬಳ್ಳಾರಿ, ನ.21: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ನನ್ನ ಮೇಲೆ ಪ್ರೀತಿ ಹೆಚ್ಚಾಗಿದೆ. ಆದುದರಿಂದ, ಒಂದು ಕಡೆ ನನಗೆ ಡಿಸಿಎಂ ಹುದ್ದೆ ಸಿಕ್ಕಿಲ್ಲ ಅಂತಾರೆ, ಮತ್ತೊಂದೆಡೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎನ್ನುತ್ತಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಗುರುವಾರ ಇಲ್ಲಿನ ಹೊಸಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ಸಿಂಗ್ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಆರೋಗ್ಯ ಸಚಿವರಿಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಕೆಲವರು ಟೀಕಿಸುತ್ತಾರೆ. ಪ್ರತಿ 20 ಕಿ.ಮೀ. ಗೆ ಭಾಷೆ ಬದಲಾಗುತ್ತದೆ. ಮೈಸೂರಿನಲ್ಲಿ ಮಾತನಾಡುವ ರೀತಿಯಲ್ಲಿ ಕನ್ನಡ ಭಾಷೆಯನ್ನು ಇಲ್ಲಿ ಮಾತನಾಡಲು ಸಾಧ್ಯವಿಲ್ಲ. ಅದೇ ರೀತಿ ಇಲ್ಲಿ ಮಾತನಾಡುವ ರೀತಿಯಲ್ಲಿ ಕರಾವಳಿ ಭಾಗದಲ್ಲಿ ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಇನ್ನು ಹಲವು ನಾಯಕರು ಇವತ್ತು ಹೊಸಪೇಟೆಯಲ್ಲಿ ಇನ್ನೂ ಎರಡು ದಿನ ಪ್ರಚಾರ ಮಾಡುತ್ತೇವೆ. ಇದಾದ ನಂತರ, ಮತ್ತೆ ಹುಣಸೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗುತ್ತೇನೆ ಎಂದು ಶ್ರೀರಾಮುಲು ತಿಳಿಸಿದರು.