15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಯಡಿಯೂರಪ್ಪ
ಹಾವೇರಿ, ನ. 24: ಮೈತ್ರಿ ಸರಕಾರ ಸರಿಯಿಲ್ಲ ಎಂದು ಹದಿನೇಳು ಮಂದಿ ಶಾಸಕರು ಸ್ವಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಅವರು ಅನರ್ಹರಲ್ಲ, ಹದಿನೈದು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ.
ರವಿವಾರ ಜಿಲ್ಲೆಯ ಹಿರೇಕೆರೂರು ಕ್ಷೇತ್ರದನ ರಟ್ಟಿಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ ಹದಿನೈದು ಕ್ಷೆತ್ರಗಳನ್ನು ಮಾದರಿ ಕ್ಷೆತ್ರಗಳನ್ನಾಗಿ ಅಭಿವೃದ್ದಿ ಪಡಿಸುಸುತ್ತೇನೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಯ 25 ಸಂಸದರನ್ನು ಗೆಲ್ಲಿಸಿದ್ದು, ಅದೇ ರೀತಿಯಲ್ಲಿಯೇ ಉಪ ಚುನಾವಣೆಯಲ್ಲಿ ಹದಿನೈದಕ್ಕೆ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಯಡಿಯೂರಪ್ಪ ಇದೇ ವೇಳೇ ವಿಶ್ವಾಸ ವ್ಯಕ್ತಪಡಿಸಿದರು.
ಹಿರೇಕೆರೂರು ಕ್ಷೇತ್ರದಲ್ಲಿ ಯು.ಬಿ.ಬಣಕಾರ ಹಾಗೂ ಬಿ.ಸಿ.ಪಾಟೀಲ್ ಒಗ್ಗೂಡಿದ್ದು, ಅವರಿಬ್ಬರ ತ್ಯಾಗ ಮಹತ್ವದ್ದಾಗಿದೆ. ಯು.ಬಿ.ಬಣಕಾರ ಇರುವುದರಿಂದ ನಮಗೆ ಯಾವುದೇ ಆತಂಕ ಇಲ್ಲ. ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಅತಿಹೆಚ್ಚು ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಬಿಎಸ್ವೈ ತಿಳಿಸಿದರು.
ಉಪಚುನಾವಣೆಯನ್ನು ಯಾವುದೇ ಕಾರಣಕ್ಕೂ ಹಗುರವಾಗಿ ತೆಗೆದುಕೊಳ್ಳಬೇಡಿ. ನಿಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಬಿ.ಸಿ.ಪಾಟೀಲರಿಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಿಗೆ ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದ ಅವರು, ರಾಜ್ಯದಲ್ಲಿ ರೈತರು ಸೇರಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದರು.