ರಾಜ್ಯಸಭಾ ಉಪಚುನಾವಣೆ ಅಧಿಸೂಚನೆ ಪ್ರಕಟ
ಕೆ.ಸಿ.ರಾಮಮೂರ್ತಿ
ಬೆಂಗಳೂರು, ನ. 25: ವಿಧಾನಸಭೆಯಿಂದ ಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭೆ ಸ್ಥಾನಕ್ಕೆ ಡಿ.12ರಂದು ನಡೆಯಲಿರುವ ಉಪಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಸೋಮವಾರ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿ ಉಪಚುನಾವಣಾ ಅಧಿಸೂಚನೆ ಹೊರಡಿಸಿದ್ದು, ಡಿ.2 ನಾಮಪತ್ರ ಸಲ್ಲಿಸಲು ಕೊನೆ ದಿನ. ಡಿ.3ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆಯಲು ಡಿ.5 ಕೊನೆಯ ದಿನವಾಗಿದೆ.
ಡಿ.12ರ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಸಿ. ರಾಮಮೂರ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ ಅವರು, ಬದಲಾದ ರಾಜಕೀಯದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.