ಚುನಾವಣಾ ಆಯೋಗ ಜೀವಂತವಾಗಿದೆಯೇ?: ವಿ.ಎಸ್.ಉಗ್ರಪ್ಪ ಪ್ರಶ್ನೆ
ಬಳ್ಳಾರಿ, ಡಿ.3: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಬಿಜೆಪಿ ನಾಯಕರು ಹಲವು ಬಾರಿ ನೀತಿ ಸಂಹಿತೆ ಉಲ್ಲಂಘಿಸಿದರೂ, ಚುನಾವಣಾ ಆಯೋಗ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ಹೊಸಪೇಟೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಸಚಿವ ಮಾಧುಸ್ವಾಮಿ ಸೇರಿದಂತೆ ಹಲವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಈ ಸಂಬಂಧ ಆಯೋಗಕ್ಕೆ ಹಲವು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಅಸಲಿಗೆ, ಚುನಾವಣಾ ಆಯೋಗ ಜೀವಂತವಾಗಿದೆಯಾ ಎಂದು ಪ್ರಶ್ನಿಸಿದರು.
ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆಗಾಗಿ ಜನರಲ್ಲಿ ಭರವಸೆ ಮೂಡಿಸಬೇಕು. ಬಿಜೆಪಿ ಕೈಗೊಂಬೆ ಆಗಬಾರದು. ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಈ ವೇಳೆ ಎಐಸಿಸಿ ಕಾರ್ಯದರ್ಶಿ ಸಾಕೆ ಶೈಲಜನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮದ್ ಇಮಾಮ್ ನಿಯಾಜಿ, ಮುಖಂಡ ಅನಿಲ್ ಲಾಡ್, ಆಂಜನೇಯಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.