ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ: ನೂತನ ಶಾಸಕರಿಂದ ಮುಖ್ಯಮಂತ್ರಿಗೆ ಒತ್ತಡ
ಬೆಂಗಳೂರು, ಜ.16: ಸಂಕ್ರಾಂತಿ ವೇಳೆಗೆ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇಟ್ಟುಕೊಂಡಿದ್ದ ನೂತನ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ. ಫೆ.17ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.
ಅಲ್ಲದೇ, ಸಚಿವ ಸಂಪುಟ ವಿಸ್ತರಣೆಯಾಗುತ್ತಿರುವುದಕ್ಕೆ ನೂತನ ಶಾಸಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜ.17ರಂದು ರಾತ್ರಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆಯೇ ಸಚಿವ ಸಂಪುಟ ವಿಸ್ತರಣೆ ಮಾಡಲು ಅನುಮತಿ ಪಡೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ, ಜ.20ರಂದು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ 11 ಮಂದಿ ಶಾಸಕರ ಪೈಕಿ ಏಳು ಮಂದಿಗೆ ಮಾತ್ರ ಸಚಿವ ಸ್ಥಾನ ನೀಡಲು ಯಡಿಯೂರಪ್ಪ ಯೋಜಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮುಖ್ಯಮಂತ್ರಿ ಸೇರಿದಂತೆ ಇನ್ನಿತರ ಪ್ರಮುಖ ನಾಯಕರೊಂದಿಗೆ ಅಮಿತ್ ಶಾ ಖಾಸಗಿ ಹೊಟೇಲ್ನಲ್ಲಿ ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಕುರಿತು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.