ಟಿಪ್ಪು ಜಯಂತಿ ನಿಷೇಧ ಆದೇಶ ಪುನರ್ ಪರಿಶೀಲಿಸಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಜ.20: ಟಿಪ್ಪು ಜಯಂತಿ ನಿಷೇಧಿಸಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪುನರ್ ಪರಿಶೀಲಿಸಿ ತೀರ್ಮಾನಿಸಲು ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಈ ಕುರಿತು ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್ ಆಲಿ ಷಾ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಟಿಪ್ಪು ಜಯಂತಿ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ಟಿಪ್ಪು ಜಯಂತಿ ರದ್ದು ಆದೇಶ ಬಿಜೆಪಿ ಸರಕಾರದ ನೀತಿಯಾಗಿದೆ. ಹೀಗಾಗಿ, ಬಿಜೆಪಿ ಸರಕಾರದ ಆದೇಶಕ್ಕೆ ಮಧ್ಯಪ್ರವೇಶಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿತು. ಟಿಪ್ಪು ಜಯಂತಿ ನಿಷೇಧದ ಆದೇಶವನ್ನು ಪುನರ್ ಪರಿಶೀಲಿಸಲು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಮಯಾವಕಾಶ ಕೇಳಿದರು. ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿತು.