ಆದಿತ್ಯ ರಾವ್ 'ಮಾನಸಿಕ ಅಸ್ವಸ್ಥ' ಎಂದ ಗೃಹ ಸಚಿವ ಬೊಮ್ಮಾಯಿ
ಬೆಳಗಾವಿ, ಜ.22 : ಮಂಗಳೂರು ವಿಮಾನ ನಿಲ್ದಾಣದಲ್ಲಿನ ಸ್ಪೋಟಕವಿಟ್ಟಿದ್ದ ಆರೋಪಿ ಆದಿತ್ಯ ರಾವ್ ಕೆಲಸವಿಲ್ಲದ ಕಾರಣ ಖಿನ್ನತೆಗೆ ಒಳಗಾಗಿ, ಮಾನಸಿಕ ಅಸ್ವಸ್ಥನಾಗಿದ್ದ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯಾವಂತನಾಗಿರುವ ಆರೋಪಿಯು ಸೂಕ್ತ ಕೆಲಸವಿಲ್ಲದೇ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಹೀಗಾಗಿ, ಇಂತಹ ಕೃತ್ಯ ಮಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಇದೇ ಆರೋಪಿ ಇದಕ್ಕೂ ಮೊದಲು ಒಂದು ಬಾರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಹುಸಿ ಕರೆ ಮಾಡಿ ಶಿಕ್ಷೆ ಅನುಭವಿಸಿದ್ದಾನೆ. ತನಿಖೆ ಕೈಗೊಳ್ಳಲು ಮೂರು ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಸಚಿವ ಬೊಮ್ಮಾಯಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನವರು ಅಲ್ಪಸಂಖ್ಯಾತರ ಓಲೈಕೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ವಿರೋಧ ಪಕ್ಷಗಳ ನಾಯಕರು ಅತ್ಯಂತ ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ. ಮಂಗಳೂರು ಪ್ರಕರಣದಲ್ಲಿ ರಾಜಕೀಯ ಮಾಡಲಾಗುತ್ತಿದೆ. ರಾಜಕೀಯ ಮಾಡುವ ಭರಾಟೆಯಲ್ಲಿ ದೇಶದ್ರೋಹಿ ಕೃತ್ಯಗಳಿಗೆ ಪ್ರಚೋದನೆ ಕೊಡಬಾರದು. ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.