ವಿಧಾನಪರಿಷತ್ ಉಪ ಚುನಾವಣೆ: ಬಿಎಸ್ವೈಗೆ ಮತ್ತೆ ಶುರುವಾಯಿತು ಟೆನ್ಶನ್
ಬೆಂಗಳೂರು, ಜ.27: ಶಿವಾಜಿನಗರ ಶಾಸಕ ರಿಝ್ವಾನ್ ಅರ್ಶದ್ ಅವರಿಂದ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಫೆ.17ರಂದು ಉಪ ಚುನಾವಣೆ ಘೋಷಿಸಿದ ಬೆನ್ನಲ್ಲೆ, ಆಡಳಿತರೂಢ ಬಿಜೆಪಿಯಲ್ಲಿ ಮತ್ತೊಂದು ಸುತ್ತಿನ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.
ಈಗಾಗಲೇ, ಸಚಿವ ಸಂಪುಟ ವಿಸ್ತರಣೆ ಮಾಡುವಲ್ಲಿ ಆಗುತ್ತಿರುವ ವಿಳಂಬದಿಂದ ನೂತನ ಶಾಸಕರು ಹೈರಾಣಾಗಿದ್ದು, ಇದೀಗ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪೈಕಿ ಯಾರಿಗೆ ಮಣೆ ಹಾಕಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಲೋಚನೆಯಲ್ಲಿ ಮುಳುಗಿದ್ದಾರೆ.
ಉಪ ಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ಅನರ್ಹ ಶಾಸಕ ಆರ್.ಶಂಕರ್ಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಅವರನ್ನು ವಿಧಾನಪರಿಷತ್ತಿನ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿಸಲಾಗುವುದು ಎಂದು ಯಡಿಯೂರಪ್ಪ ಭರವಸೆ ನೀಡಿದ್ದರು. ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಿದ್ದರಿಂದ, ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿಯನ್ನು ಯಾವುದೇ ಕಾರಣಕ್ಕೂ ಅಗೌರವದಿಂದ ನಡೆಸಿಕೊಳ್ಳಬಾರದು ಎಂದು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗೆ ಸೂಚನೆ ನೀಡಿತ್ತು.
ಅದರಂತೆ, ಲಕ್ಷ್ಮಣ ಸವದಿಯನ್ನು ವಿಧಾನಪರಿಷತ್ತಿಗೆ ಆಯ್ಕೆ ಮಾಡುವುದಲ್ಲದೇ, ಉಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಉಪ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಲಕ್ಷ್ಮಣ ಸವದಿ ಆರು ತಿಂಗಳ ಒಳಗಾಗಿ ವಿಧಾನಸಭೆ ಅಥವಾ ವಿಧಾನಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಳ್ಳಬೇಕಿದೆ. ಇವರಿಬ್ಬರನ್ನೂ ಹೊರತುಪಡಿಸಿ, ಬಿಜೆಪಿ ಸರಕಾರ ರಚನೆಗಾಗಿ ಶಾಸಕ ಹಾಗೂ ಸಚಿವ ಸ್ಥಾನ್ಕಕೆ ರಾಜೀನಾಮೆ ನೀಡಿದ್ದ ಎಂಟಿಬಿ ನಾಗರಾಜ್ ಹಾಗೂ ಎಚ್.ವಿಶ್ವನಾಥ್ ಕೂಡ ವಿಧಾನಪರಿಷತ್ತಿನ ಸದಸ್ಯರಾಗುವ ಮೂಲಕ ಯಡಿಯೂರಪ್ಪ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನಪಡೆಯುವ ಪ್ರಯತ್ನಗಳನ್ನು ಮುಂದುವರೆಸಿದ್ದಾರೆ.
ಆದ್ಯತೆಯ ಮೇರೆಗೆ ಶಂಕರ್ ಹಾಗೂ ಲಕ್ಷ್ಮಣ ಸವದಿ ನಡುವೆ ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬ ಗೊಂದಲದಲ್ಲಿ ಮುಖ್ಯಮಂತ್ರಿ ಇದ್ದು, ಬಹುತೇಕ ಲಕ್ಷ್ಮಣ ಸವದಿಗೆ ಬಿಜೆಪಿ ಹೈಕಮಾಂಡ್ ಮಣೆಹಾಕುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮುಂದಿನ ಜೂನ್ ವೇಳೆಗೆ ವಿಧಾನಪರಿಷತ್ತಿನ ಹಲವು ಸ್ಥಾನಗಳು ಖಾಲಿಯಾಗುವುದರಿಂದ, ಅಲ್ಲಿಯವರೆಗೆ ಕಾಯುವಂತೆ ಶಂಕರ್ಗೆ ಮುಖ್ಯಮಂತ್ರಿ ಸಂದೇಶ ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.