ಸಿದ್ದಾಪುರ: ವಿದ್ಯಾರ್ಥಿನಿ ನಾಪತ್ತೆ; ಯುವಕನ ವಿರುದ್ಧ ಅಪಹರಣ ಪ್ರಕರಣ ದಾಖಲು
ಸಿದ್ದಾಪುರ (ಕೊಡಗು), ಜ.28: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ರಾತ್ರಿ ಯುವಕನ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ.
ನೆಲ್ಯಹುದಿಕೇರಿ ಗ್ರಾಮದ ಅಪ್ರಾಪ್ತ ಬಾಲಕಿಯು ಸೋಮವಾರ ಬೆಳಗ್ಗೆ ಕಾಲೇಜಿಗೆ ತೆರಳಿದ್ದು, ಸಂಜೆಯಾದರೂ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಪಾಲಕರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಂಘಪರಿವಾರದ ಕಾರ್ಯಕರ್ತ ಎನ್ನಲಾದ ಇದೇ ಗ್ರಾಮದ ದೀಪಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಠಾಣೆಯ ಮುಂದೆ ಪ್ರತಿಭಟನೆ: ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿ ಗಂಟೆಗಳು ಕಳೆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಹಾಗೂ ವಿದ್ಯಾರ್ಥಿನಿಯ ಜೀವಕ್ಕೆ ಅಪಾಯವಿದೆ ಎಂದು ಪಾಲಕರು ಮತ್ತು ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆಯೂ ನಡೆಯಿತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಶೀಘ್ರದಲ್ಲೇ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವುದರ ಜೊತೆಗೆ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿದೆ.
ದೀಪಕ್ ಹಾಗೂ ಅಪ್ರಾಪ್ತ ಬಾಲಕಿಯ ಮದುವೆ ಉಡುಪಿನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಾಲಕಿಯ ಪಾಲಕರು ಪೊಲೀಸರನ್ನು ಒತ್ತಾಯಿಸಿದ ಹಿನ್ನಲೆ ಪೊಲೀಸರು ದೀಪಕ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.