ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಹೈಕಮಾಂಡ್ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಹೇಳಿದ್ದೇನು ?
ಹೊಸದಿಲ್ಲಿ, ಜ.31: ಎರಡು, ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುವುದು. ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ನಮ್ಮ ಬಹುತೇಕ ಎಲ್ಲ ಸಲಹೆಗಳಿಗೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶುಕ್ರವಾರ ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯನ್ನು ಯಾವಾಗ ಬೇಕಾದರೂ ಮಾಡಬಹುದು ಎಂದು ವರಿಷ್ಠರು ಅನುಮತಿ ನೀಡಿದ್ದಾರೆ ಎಂದರು.
ನಾಳೆ ಬೆಂಗಳೂರಿನಲ್ಲಿ ಕೆಲವರನ್ನು ಕರೆದು ಮಾತನಾಡಿಸಿ, ಮನವೊಲಿಕೆ ಮಾಡಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಕಟಿಸಲಾಗುವುದು. ಎಷ್ಟು ಜನರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ, ಯಾರಿಗೆಲ್ಲ ಅವಕಾಶ ಸಿಗುತ್ತದೆ ಎಂಬುದೆಲ್ಲ ಶೀಘ್ರವೆ ತಿಳಿಯಲಿದೆ ಎಂದು ಅವರು ಹೇಳಿದರು.
ಹೈಕಮಾಂಡ್ನಿಂದ ನಮಗೆ ಯಾವುದೇ ರೀತಿಯ ಪಟ್ಟಿ ನೀಡಿಲ್ಲ. ನಮ್ಮ ಬಹುತೇಕ ಸಲಹೆಗಳಿಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಮಾಧ್ಯಮಗಳಲ್ಲಿ ಏನೇನೋ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಅಂತಹ ಯಾವುದೇ ಬೆಳವಣಿಗೆಗಳು ಇಲ್ಲ. ನಾನು ಬಹಳ ಸಂತೋಷದಿಂದಲೇ ಬೆಂಗಳೂರಿಗೆ ಹಿಂದಿರುಗುತ್ತಿದ್ದೇನೆ. ಈಗಿರುವ ಮೂವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಉಪ ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.
ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಎಲ್ಲವನ್ನೂ ಈ ಬಾರಿಯ ಬಜೆಟ್ನಲ್ಲಿ ಮಾಡಿಕೊಡಬೇಕು ಎಂದು ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಹೇಳಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.